ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶನಿವಾರ ಚಾಲನೆ ನೀಡಿದರು.ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತುಪ್ರದರ್ಶನ ಇದಾಗಿದ್ದು ಸಚಿವ ಡಿ.ಸುಧಾಕರ್ ಸರ್ಕಾರದ ಸಾಧನೆ ಫಲಕಗಳ ವೀಕ್ಷಿಸಿದರು.
ವಸ್ತುಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2000 ರು. ಹಣ ನೀಡುವ ಗೃಹಲಕ್ಷ್ಮಿ ಯೋಜನೆ, ಹಸಿವು ಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಯುವ ಜನತೆಗೆ ಉದ್ಯೋಗ ಪಡೆಯಲು ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ 3000 ರು. ಹಾಗೂ ಡಿಪ್ಲೊಮೊ ಪದವಿದರರಿಗೆ 1500 ರು. ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳ ಸಾಧನೆ ಫಲಕ ನೋಡುಗರ ಗಮನ ಸೆಳೆದವು. ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿರುವ, ಜನಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸೇರಿ ಗಣ್ಯರು ವೀಕ್ಷಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳನ್ನು ಒಳಗೊಂಡ ಸೆಲ್ಫಿ ಪಾಯಿಂಟ್ಗಳನ್ನು ವೀಕ್ಷಿಸಿ ಪ್ರಶಂಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ರಘುಮೂರ್ತಿ ಅವರೊಂದಿಗೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಕೂಡ ಸೆಲ್ಫಿಪಾಯಿಂಟ್ನಲ್ಲಿ ನಿಂತು ಫೋಟೊ ತೆಗೆಯಿಸಿಕೊಂಡು ಸಂತಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜೂ.28ರಿಂದ 30ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾಹಿತಿ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ತಾಲೂಕು ಅಧ್ಯಕ್ಷ ಪ್ರಕಾಶ್, ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಡಿವೈಎಸ್ಪಿ ದಿನಕರ್, ಗ್ಯಾರಂಟಿ ಯೋಜನಾ ಪ್ರಾಧಿಕಾರದ ಸದಸ್ಯರು ಮತ್ತಿತರರು ಇದ್ದರು.