ಸಾರಾಂಶ
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ಬಳಿ ವಿವರಣೆ ಪಡೆಯುತ್ತೇನೆ. ಹಾಗೆಯೇ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆ ಸಚಿವ ಬಿ. ನಾಗೇಂದ್ರ ಅವರ ವ್ಯಾಪ್ತಿಗೆ ಬರುವ ಕಾರಣ ವಿರೋಧ ಪಕ್ಷಗಳು ಅವರ ರಾಜೀನಾಮೆ ಕೇಳುತ್ತಿವೆ. ಅದು ಅವರ ಧರ್ಮ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೇರಿ ಇನ್ನೊಬ್ಬರನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಕುರಿತು ನಾಗೇಂದ್ರ ಅವರ ಬಳಿಯಲ್ಲೂ ವಿವರಣೆ ಪಡೆಯುತ್ತೇನೆ. ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷಿಸಲಾಗುವುದು ಎಂದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬರೆದಿರುವ ಡೆತ್ನೋಟ್ನಲ್ಲಿ ಸಚಿವರ ಮೌಖಿಕ ಆದೇಶ ಇತ್ತು ಎಂದೂ ಉಲ್ಲೇಖಿಸಿದ್ದಾರೆ. ಆದರೆ, ನಾಗೇಂದ್ರ ಅವರ ವಿರುದ್ಧ ನೇರವಾಗಿ ಆರೋಪ ಮಾಡಿಲ್ಲ. ಆದರೂ, ಪ್ರಕರಣವನ್ನು ಎಲ್ಲ ಆಯಾಮದಲ್ಲೂ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.