ಹೆಣ್ಣುಮಕ್ಕಳ ವಿರುದ್ಧದ ಶೋಷಣೆಗೆ ಕಡಿವಾಣ ಹಾಕಬೇಕಿದೆ: ಜ್ಯೋತಿ ಪಾಟೀಲ

| Published : Oct 14 2024, 01:15 AM IST

ಹೆಣ್ಣುಮಕ್ಕಳ ವಿರುದ್ಧದ ಶೋಷಣೆಗೆ ಕಡಿವಾಣ ಹಾಕಬೇಕಿದೆ: ಜ್ಯೋತಿ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಹೆಣ್ಣುಮಕ್ಕಳ ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳದಂತಹ ಕೃತ್ಯಗಳನ್ನು ತಡೆಗಟ್ಟಿ,ಅವರ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಯೊಂದು ಮನೆಯ ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಸಸಿ ನೆಡಬೇಕು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಹೆಣ್ಣುಮಕ್ಕಳ ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳದಂತಹ ಕೃತ್ಯಗಳನ್ನು ತಡೆಗಟ್ಟಿ,ಅವರ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಯೊಂದು ಮನೆಯ ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಸಸಿ ನೆಡಬೇಕು ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.

ಪಟ್ಟಣದ ದಿವಾಣಿ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಆವರಣದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಆಶ್ರಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ ನಿಮಿತ್ತ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ ನಿಮಿತ್ತ ಹೆಣ್ಣು ಮಕ್ಕಳ ಹೆಸರಿನಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬುದು ಹಿಂದಿನಿಂದಲೂ ನಮ್ಮಲ್ಲಿ ಪ್ರಚಲಿತದಲ್ಲಿರುವ ಮಾತು. ಆದರೆ, ಇದು ಮಾತಾಗಿಯೇ ಉಳಿಯಿತೇ ವಿನಃ ಅಕ್ಷರಶಃ ಅನುಷ್ಠಾನಲ್ಲಿ ಬರಲಿಲ್ಲ. ಕಳೆದ ಕೆಲವು ದಶಕಗಳಿಗೆ ಹೋಲಿಸಿದಲ್ಲಿ ಹೆಣ್ಣುಮಕ್ಕಳು ಈಗ ಸಾಕಷ್ಟು ಪ್ರಮಾಣದಲ್ಲಿ ಸುಶಿಕ್ಷಿತರಾಗುತ್ತಿರುವರಾದರೂ ಗ್ರಾಮೀಣ ಪ್ರದೇಶಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಬೇಕಿದೆ ಎಂದರು.

ಹೆಣ್ಣು ಮಗುವಿನ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ ಅದರಲ್ಲೂ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ ತಾರತಮ್ಯ, ಮುಂತಾದ ಸಮಸ್ಯೆಗಳಿಂದ ಹೆಣ್ಣು ಬಳಲುತ್ತಿದ್ದಾಳೆ. ಇಂದಿನ ಆಧುನಿಕ ಯುಗದಲ್ಲೂ ಹೆಣ್ಣುಮಕ್ಕಳಲ್ಲಿ ಅಭದ್ರತೆ ಕಾಡುತ್ತಿದೆ ಎಂದರೆ ಸಮಾಜ ಇನ್ನೂ ಹಿಂದುಳಿದಿದೆ ಎಂದೇ ಅರ್ಥ. ಕಲಿತ ಹೆಣ್ಣೂ ಕೂಡ ಉದ್ಯೋಗದ ಸ್ಥಳದಲ್ಲಿ ದೌರ್ಜನ್ಯ ಅನುಭವಿಸುವ ಎಷ್ಟೋ ನಿದರ್ಶಗಳು ನಮ್ಮ ಮುಂದಿವೆ. ಈ ಎಲ್ಲ ತೊಡಕುಗಳನ್ನು ನಿವಾರಿಸಿ ಹೆಣ್ಣು ಮಕ್ಕಳಿಗೆ ಭದ್ರತೆಯ ವಾತಾವರಣ ಕಲ್ಪಿಸುವ ಉದ್ದೇಶದಿಂದ ಸಾಕಷ್ಟು ಯೋಜನೆಗಳು ರೂಪುಗೊಂಡಿವೆ ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನವರ, ಬಿಇಒ ಅಜೀತ ಮನ್ನಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಪ್ಪ ಗದಾಡಿ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್. ಬಾಗೋಜಿ, ಪ್ರಧಾನ ಕಾರ್ಯದರ್ಶಿ ಅನೀಲ ಕೌಜಲಗಿ, ಅಂಗನವಾಡಿ ಮೇಲ್ವಿಚಾರಕಿ ಕಸ್ತೂರಿ ಪಡೆನ್ನವರ, ಯಮನಾ ತಳವಾರ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರು, ವಿದ್ಯಾರ್ಥಿಗಳು ಇದ್ದರು.