ಪಠ್ಯೇತರಕ್ಕೂ ಪ್ರೋತ್ಸಾಹ ಅಗತ್ಯ

| Published : Apr 07 2024, 01:48 AM IST

ಸಾರಾಂಶ

ದೊಡ್ಡಬಳ್ಳಾಪುರ: ಗುಣಮಟ್ಟದ ಶಿಕ್ಷಣಕ್ಕೆ ಸಾಂಸ್ಕೃತಿಕ ಚಿಂತನೆಗಳು ಪೂರಕವಾಗಿದ್ದು, ಶೈಕ್ಷಣಿಕ ವಾತಾವರಣದಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಅಗತ್ಯ ಪ್ರೋತ್ಸಾಹ ನಿರೀಕ್ಷಿತ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.

ದೊಡ್ಡಬಳ್ಳಾಪುರ: ಗುಣಮಟ್ಟದ ಶಿಕ್ಷಣಕ್ಕೆ ಸಾಂಸ್ಕೃತಿಕ ಚಿಂತನೆಗಳು ಪೂರಕವಾಗಿದ್ದು, ಶೈಕ್ಷಣಿಕ ವಾತಾವರಣದಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಅಗತ್ಯ ಪ್ರೋತ್ಸಾಹ ನಿರೀಕ್ಷಿತ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಕಲರವ-2024 ಕಾಲೇಜು ಹಬ್ಬದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಗಣನೀಯ ಸೇವೆ ಸಲ್ಲಿಸುತ್ತಿವೆ. ವಿದ್ಯಾರ್ಥಿಯ ಎಲ್ಲ ವಿಧವಾದ ಧನಾತ್ಮಕ ಆಲೋಚನೆಗಳನ್ನು ಪ್ರಭಾವಿಸುವ ಮೂಲಕ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ತರಗತಿಗಳಿಗೆ ಬೆಂಗಳೂರಿನ ಕಾಲೇಜುಗಳತ್ತ ಹೋಗುವ ಪರಿಪಾಠ ಬೆಳೆಯುತ್ತಿದೆ. ಗ್ರಾಮೀಣ ಪ್ರದೇಶದಲ್ಲೇ ದೊರೆಯುತ್ತಿರುವ ಉತ್ತಮ ಸವಲತ್ತುಗಳನ್ನು ಅವರು ಸದುಪಯೋಗ ಪಡಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೃಷ್ಣಪ್ಪ, ಶೈಕ್ಷಣಿಕ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಪ್ರಾಂಶುಪಾಲ ನರಸಿಂಹರೆಡ್ಡಿ, ವಿವಿಧ ಶೈಕ್ಷಣಿಕ ಘಟಕಗಳ ಮುಖ್ಯಸ್ಥರಾದ ಮಹಂತೇಶಪ್ಪ, ಧನಂಜಯ್, ಜಿಯಾವುಲ್ಲಾ ಖಾನ್ ಮತ್ತಿತರರು ಭಾಗವಹಿಸಿದ್ದರು.

ಇದೇ ವೇಳೆ ವಿವಿಧ ಶೈಕ್ಷಣಿಕ, ಕ್ರೀಡಾ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.