ಚಾಲಕರು ವಾಹನ ಚಾಲನೆ ಮಾಡಬೇಕಾದರೆ ಸಂಚಾರ ನಿಯಮ ಪಾಲನೆ ಮಾಡಬೇಕು. ಮದ್ಯಪಾನ, ಧೂಮಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಾಯಕ್ಕೆ ಎಡೆ ಮಾಡಿಕೊಡಲಿದೆ.

ಹೊಸಪೇಟೆ: ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆಯಿಂದ ರಸ್ತೆ ಅಪಘಾತ ತಪ್ಪಿಸುವ ಮೊದಲ ಹಾದಿಯಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಹೇಳಿದರು.

37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಗುರುವಾರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೇತ್ರಲಕ್ಷ್ಮೀ ವೈದ್ಯಾಲಯ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅಶ್ವಿನಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚಾಲಕರು ವಾಹನ ಚಾಲನೆ ಮಾಡಬೇಕಾದರೆ ಸಂಚಾರ ನಿಯಮ ಪಾಲನೆ ಮಾಡಬೇಕು. ಮದ್ಯಪಾನ, ಧೂಮಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಾಯಕ್ಕೆ ಎಡೆ ಮಾಡಿಕೊಡಲಿದೆ. ರಸ್ತೆ ಸಂಚಾರ ನಿಯಮಗಳನ್ನರಿತು ಮುಂಜಾಗ್ರತೆ ವಾಹನ ಚಾಲನೆ ಮಾಡಬೇಕು. ನಿಗದಿತ ವೇಗ ಮಿತಿಯಲ್ಲಿ ಸುರಕ್ಷಿತವಾಗಿ ಚಾಲನೆ ಮಾಡಿ ಸುರಕ್ಷಿತವಾಗಿರಿ ಎಂದು ಅವರು ಸಲಹೆ ನೀಡಿದರು.

ಬಲ್ದೋಟ ಎಂ.ಎಸ್.ಪಿ.ಎಲ್ ಸಂಸ್ಥೆಯ ಸಿಇಓ ಮಧುಸೂದನ್ ಅವರು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಉಚಿತ ತಪಾಸಣೆ ಶಿಬಿರ ಆಯೋಜಿಸಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ನೇತ್ರಲಕ್ಷ್ಮಿ ಆಸ್ಪತ್ರೆಯ ಡಾ.ಶ್ರೀನಿವಾಸ ವಿ. ದೇಶಪಾಂಡೆ, ಮೋಟಾರು ವಾಹನ ನಿರೀಕ್ಷಕ ನಾಗರಾಜ್, ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿಗಳು ಇದ್ದರು.