ಸಾರಾಂಶ
ರಾಜ್ಯದಲ್ಲಿ ಆಡಳಿತ ವೈಫಲ್ಯ ಒಂದೆಡೆಯಾದರೆ ಕಾನೂನು ಸುವ್ಯವಸ್ಥೆಯೂ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯದಲ್ಲಿ ಆಡಳಿತ ವೈಫಲ್ಯ ಒಂದೆಡೆಯಾದರೆ ಕಾನೂನು ಸುವ್ಯವಸ್ಥೆಯೂ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ವೇತನ ನೀಡಲು ಹಣದ ಕೊರತೆ ಎದುರಾಗಿದೆ. ಆರ್ಥಿಕ ಕೊರತೆಯಿಂದ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂದು ಆರೋಪಿಸಿದರು.
ರಾಜ್ಯದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ದೇಶವಿ ಭಜನೆಯ ಮಾತನ್ನಾಡಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಗ್ಗೆ ರಾಜ್ಯ ಸರ್ಕಾರ ಮೃದು ಧೋರಣೆ ತಳೆದಿದೆ.
ಪಾಕ್ ಪರ ಘೋಷಣೆ ಕೂಗಿರುವುದು ನಿಜವಾದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಸತೀಶ್ ಕುಂಪಲ ಆಕ್ಷೇಪಿಸಿದರು.
ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಘಟನೆ ನಡೆಯುಯುವ ಮೂಲಕ ರಾಜ್ಯದಲ್ಲಿ ಜನರಿಗೆ ಭದ್ರತೆ ಇಲ್ಲ ಎಂಬುದು ಸಾಬೀತಾಗಿದೆ. ಆರೋಪಿಯನ್ನು ಇದುವರೆಗೆ ಬಂಧಿಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ವಿತರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಉಚಿತ ವಿದ್ಯುತ್ ಎಂದು ಹೇಳಿ ವಿದ್ಯುತ್ ಬಿಲ್ ಬೇಕಾಬಿಟ್ಟಿ ಹಾಕುತ್ತಿದ್ದಾರೆ. ಸರ್ಕಾರಿ ಬಸ್ಗಳ ವ್ಯವಸ್ಥೆ ಕುಸಿದಿದೆ.
ಸರ್ಕಾರದ ಬಹುತೇಕ ಇಲಾಖೆ ನೌಕರರಿಗೆ ಸಂಬಳ ವಿಳಂಬವಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಅಭಿವೃದ್ಧಿ ಯೋಜನೆಗಳಿಗಾಗಿ ಶಾಸಕರಿಗೆ ಅನುದಾನ ದೊರೆಯುತ್ತಿಲ್ಲ ಎಂದು ಕುಂಪಲ ಆರೋಪಿಸಿದರು.
ಅರುಣ್ ಕುಮಾರ್ ಪುತ್ತಿಲ ಅವರು ತಮ್ಮ ಸಂಘಟನೆ ಪುತ್ತಿಲ ಪರಿವಾರವನ್ನು ವಿಸರ್ಜಿಸಿ ಬಿಜೆಪಿ ಸೇರುವಂತೆ ಆಹ್ವಾನಿಸಲಾಗಿದೆ. ಆರೇಳು ತಿಂಗಳಿನಿಂದ ವಿವಿಧ ಸ್ತರದ ನಾಯಕರು ಮಾತುಕತೆ ನಡೆಸಿದ್ದಾರೆ ಎಂದ ಅವರು, ಏನೇ ಆದರೂ ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ 3.50- 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ವಿತ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ಲೋಕಸಭಾ ಚುನಾವಣೆ ಸಂಚಾಲಕ ನಿತಿನ್ ಕುಮಾರ್, ಪಕ್ಷದ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಇದ್ದರು.