ಸಾರಾಂಶ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಪ್ರಕರಣದ ಕುರಿತು ಸತ್ಯಾಸತ್ಯತೆ ಅರಿಯಲು ನಿಷ್ಪಕ್ಷಪಾತ ತನಿಖೆ ನಡೆಸಲು ಸಚಿವೆ ಹೆಬ್ಬಾಳಕರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಡಿ.20ರ ಪತ್ರ ಆಧರಿಸಿ ಈ ಆದೇಶ ಹೊರಡಿಸಲಾಗಿದ್ದು, ನಿವೃತ್ತ ನ್ಯಾಯಾಧೀಶ ಎಚ್.ಜಿ.ನಾಗರತ್ನ ತನಿಖೆ ನಡೆಸಲಿದ್ದಾರೆ.ಹಿಂದಿನ ಉಪನಿರ್ದೇಶಕ ಆರ್. ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ, ಎಂಎಸ್ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿ ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಅಕ್ರಮ ಹಾಗೂ ಕಾನೂನು ಬಾಹಿರ ನಕಲಿ ಬಿಲ್ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ₹2 ಕೋಟಿಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.