ತಳವಾರ ಹೆಸರಲ್ಲಿ ನಕಲಿ ಎಸ್‌ಟಿ ಪ್ರಮಾಣಪತ್ರ, ವಾಲ್ಮೀಕಿ ಸಮಾಜ ಪ್ರತಿಭಟನೆ

| Published : Sep 26 2025, 01:00 AM IST

ತಳವಾರ ಹೆಸರಲ್ಲಿ ನಕಲಿ ಎಸ್‌ಟಿ ಪ್ರಮಾಣಪತ್ರ, ವಾಲ್ಮೀಕಿ ಸಮಾಜ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಜನರು ಗುರುವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಜನರು ಗುರುವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ಸಮಾಜದ ಮುಖಂಡ ಚಂದ್ರಣ್ಣ ಬೇಡರ ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಮತ್ತು ಪರಿಶಿಷ್ಟ ಪಂಗಡದ ನಿಜವಾದ ನಾಯಕ ತಳವಾರರಿಗೆ ಅನ್ಯಾಯವಾಗುತ್ತಿರುವುದನ್ನು ತಡೆಗಟ್ಟಬೇಕು. ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಅಕ್ರಮವಾಗಿ ಬೇರೆ ಸಮುದಾಯದವರು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯಗಳನ್ನು ವಂಚಿಸುತ್ತಿದ್ದಾರೆ. ಇದರಿಂದ ನೈಜ ತಳವಾರ ಜಾತಿಯವರಿಗೆ ಶಿಕ್ಷಣ, ನೇಮಕಾತಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಘೋರ ಅನ್ಯಾಯ ಸಂಭವಿಸಿದೆ ಎಂದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹೆಚ್ಚುವರಿ 1000 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು. ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ, ಪರಿಶಿಷ್ಟ ಪಂಗಡದ ಜನಾಂಗದ ಆರ್ಥಿಕ, ಶೈಕ್ಷಣಿಕ, ರಾಜಕೀಯ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು. ರಾಜ್ಯದ ಕೆಲ ತಾಲೂಕುಗಳಲ್ಲಿ ವಾಲ್ಮೀಕಿ ಭವನಗಳ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿವೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವುಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆದು ಭದ್ರತೆ ಒದಗಿಸಬೇಕು. ಬೇರೆ ಪ್ರಬಲ ಸಮುದಾಯಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ರವಿಂದ್ರಗೌಡ ಪಾಟೀಲ, ಕರಬಸಪ್ಪ ಕೂಲೇರ, ಹನುಮಂತ ಮೀನಕಟ್ಟಿ, ರಾಜೇಂದ್ರ ಬಸೇನಾಯಕ, ಶಶಿಧರ ಬಸೇನಾಯಕ, ರಾಜು ಮಾದಮ್ಮನವರ, ಭೀಮಣ್ಣ ಎಡಚಿ, ಮೌನೇಶ ತಳವಾರ, ರಾಯಣ್ಣ ಮಾಗನೂರು, ಬಸವರಾಜ ತಳವಾರ, ಸಂಜೀವ ಶಿಡಗನಾಳ, ನಾಗೇಶ ತಳವಾರ, ರವಿ ತಳವಾರ, ಶ್ರೀನಿವಾಸ ಹುಬ್ಬಳ್ಳಿ, ಮಂಜುನಾಥ ತಳವಾರ ಮತ್ತಿತರರಿದ್ದರು.