ಕನ್ನಡಪ್ರಭ ವಾರ್ತೆ ಮದ್ದೂರು
ಕೇಂದ್ರ ಸಚಿವನಾದ 5 ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅಂಕಿತ ಹಾಕಿಸುತ್ತೇನೆ ಎಂದು ಬರೀ ಸುಳ್ಳು ಹೇಳಿಕೊಂಡು ಬಂದಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜನರು ಇನ್ನು ನಂಬುವರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಟೀಕಿಸಿದರು.ನಗರದ ಶಿವಪುರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ 1000 ಸಾವಿರ ನೀಡಿದ್ದರ ಬಗ್ಗೆ ಲೆಕ್ಕ ಕೊಡಿ ಎಂದು ಕೇಳುತ್ತಾರೆ. ನಾವು ಕೊಡಲು ಸಿದ್ಧರಿದ್ದೇವೆ. ಆದರೆ, ಹಲವು ವರ್ಷಗಳ ಹಿಂದೆ ಜಿಲ್ಲೆಗೆ ಅವರು ಏನೋ ಅನುದಾನ ನೀಡಿದ್ದಾರೆ ಎಂದು ಹುಡುಕುತ್ತಿದ್ದೇವೆ. ಆದರೆ, ಸಿಗುತ್ತಿಲ್ಲ ಎಂದು ಕುಟುಕಿದರು.
ನಾನು ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ. ಮೈಷುಗರ್ಶ್ ಕಾರ್ಖಾನೆ ಪುನಶ್ಚೇತನಕ್ಕೆ ಹೆಚ್ಚಿನ ಅನುದಾನ, ಕೃಷಿ ವಿವಿಯನ್ನು ಮಂಡ್ಯಕ್ಕೆ ತಂದ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ. ಕೇಂದ್ರ ನಾಯಕ ರಾಹುಲ್ ಗಾಂಧಿ ಅವರು ಜನರ ಕಷ್ಟ ಸುಖ ತಿಳಿಯಲು ದೇಶದ ಉದ್ದಗಲಕ್ಕೂ ಪಾದಯಾತ್ರೆ ನಡೆಸಿದ್ದನ್ನು ಜನತೆ ಮರೆಯುವುದಿಲ್ಲ ಎಂದರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಇತ್ತೀಚೆಗೆ ನಡೆದ ಮನ್ಮುಲ್, ಡಿಸಿಸಿ ಬ್ಯಾಂಕ್ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಹುಮತ ಪಡೆದು ಗೆದ್ದು ಅಧಿಕಾರ ಹಿಡಿದಿದ್ದಾರೆ. ಅಷ್ಟೇ ಅಲ್ಲದೇ, ಮುಂಬರುವ ಗ್ರಾಪಂ, ಜಿಪಂ ಸೇರಿದಂತೆ ನಗರಸಭಾ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳು ಗೆಲುವು ಸಾಧಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮವಹಿಸಬೇಕು ಕೆರೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲೂಕು ಘಟಕದ ಅಧ್ಯಕ್ಷ ಚಲುವರಾಜು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್, ಡಿಸಿ ಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಪುರಸಭೆ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಪಂ ಮಾಜಿ ಅಧ್ಯಕ್ಷರಾದ ಸುರೇಶ್ ಕಂಠಿ, ಮೋಹನ್ ಕುಮಾರ್, ಮುಖಂಡರಾದ ಐಶ್ವರ್ಯ ಡೆವಲಪರ್ಸ್ ನ ಸತೀಶ್ ಸೇರಿದಂತೆ ಹಲವರು ಹಾಜರಿದ್ದರು.
ಮದ್ದೂರು ಉತ್ಸವ ಅರ್ಥಪೂರ್ಣ ಆಚರಣೆಗೆ ಕ್ರಮ: ಕೆ.ಎಂ.ಉದಯ್
ಮದ್ದೂರು:ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ನಿಂದ ಮದ್ದೂರು ಉತ್ಸವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದ ಮದ್ದೂರು ಉತ್ಸವದ ಅಂಗವಾಗಿ ಮ್ಯಾರಾಥಾನ್ (ಕಾಲ್ನಾಡಿಗೆ) ಜಾಥಾ ವೇಳೆ ಮಾತನಾಡಿ, ಮದ್ದೂರು ಇತಿಹಾಸದ ಪುಟಗಳಲ್ಲಿ ಜನರ ಮನಸಿನಲ್ಲಿ ಶಾಶ್ವತವಾಗಿ ಉಳಿಯುವ ರೀತಿಯಲ್ಲಿ ಮದ್ದೂರು ಉತ್ಸವವನ್ನು ವ್ಯವಸ್ಥಿತವಾಗಿ ಆಚರಿಸುವ ಉದ್ದೇಶದಿಂದ ಹಲವಾರು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜನರು ಅಗತ್ಯ ಸಹಕಾರ ನೀಡಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.