ಮದ್ದೂರು: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ವಿಶ್ರಾಂತ ಪ್ರಾಧ್ಯಾಪಕಿ ಡಾ.ಬಿ.ಟಿ.ನೇತ್ರಾವತಿಗೌಡ ಅಭಿಪ್ರಾಯಪಟ್ಟರು. ತಾಲೂಕಿನ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿ, ನೃತ್ಯ, ಸಂಗೀತ, ಜನಪದ, ಭಾವಗೀತೆ, ಏಕಪಾತ್ರ ಅಭಿನಯ, ನಾಟಕ , ಸ್ವರಚಿತ ಕವನಗಳು ಮೊದಲಾದ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಇರುವ ಸುಪ್ತ ಪ್ರತಿಭೆಗಳು ಬೆಳಕಿಗೆ ಬರಲು ಈ ಸ್ಪರ್ಧೆಗಳು ನೆರವಾಗುತ್ತದೆ ಎಂದರು. ವಿದ್ಯಾರ್ಥಿಗಳು ಧೈರ್ಯದಿಂದ, ಸಂಕೋಚಗಳನ್ನು ತೊರೆದು ತಮಗಿಷ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಭವಿಷ್ಯದಲ್ಲಿ ಕನಸನ್ನು ನನಸಾಗಿಸಿಕೊಳ್ಳಬೇಕು. ಪ್ರಾಧ್ಯಾಪಕ ವರ್ಗ ಕೂಡ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪೋಷಿಸಬೇಕೆಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಅಣ್ಣಯ್ಯ ತೈಲೂರು ಮಾತನಾಡಿ, ವಿದ್ಯಾರ್ಥಿಗಳು ಸಾಧಿಸುವ ಹಂಬಲ, ಸ್ವಷ್ಟ ಗುರಿಗಳನ್ನು ಹೊಂದುವ ಮೂಲಕ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬೇಕು ಕರೆ ನೀಡಿದರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳನ್ನು ಹೂ ಗುಚ್ಛ ನೀಡಿ ಸಾಂಪ್ರದಾಯಿಕ ಉಡುಪಿನಲ್ಲಿ ಸ್ವಾಗತಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಯಶೋಧ ಜಿ, ಶ್ರೀನಿವಾಸ್, ಡಾ.ಲತಾ, ಸಂತೋಷ, ಡಾ.ಉಮೇಶ್, ಕುಮಾರ ಇದ್ದರು. ದ್ವಿತೀಯ ಬಿಎ ವಿದ್ಯಾರ್ಥಿಗಳಾದ ಸುಷ್ಮಾಂಜಲಿ , ಅರ್ಪಿತ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಿದವು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.