ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸಲು ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ನಲ್ಲಿ ಅನುಮೋದನೆ ಅನುದಾನ ನೀಡುವಂತೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಆಗ್ರಹಿಸಿದೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಸಂಘ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಮಾತನಾಡಿ, ಬ್ರಹ್ಮಾವರದಲ್ಲಿ ಪ್ರಸ್ತುತವಿರುವ ಡಿಪ್ಲೋಮಾ ಕಾಲೇಜನ್ನು ಉನ್ನತೀಕರಿಸಿ ಕೃಷಿ ಕಾಲೇಜನ್ನಾಗಿ ಪರಿವರ್ತಿಸಬೇಕು ಎಂಬುದು ಈ ಭಾಗದ ರೈತರ ಮಕ್ಕಳ ಬಹುದಿನದ ಬೇಡಿಕೆಯಾಗಿದ್ದು, ಸರ್ಕಾರ ಅದನ್ನು ಬಜೆಟ್ ಮೂಲಕ ಈಡೇರಿಸಬೇಕು ಎಂದು ಹೇಳಿದರು.ಇಲ್ಲಿನ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಹಾಗು ಡಿಪ್ಲೋಮಾ ಕಾಲೇಜುಗಳು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಕೃಷಿ ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳಿಗೆ ಸುಮಾರು 350 ಎಕರೆ ಜಮೀನಿದ್ದು, ಕಾಲೇಜು ಸ್ಥಾಪನೆಗೆ ಸೂಕ್ತವಾಗಿದೆ ಎಂದರು.ಕರಾವಳಿಯ ಮೂರು ಜಿಲ್ಲೆಗಳಲ್ಲಿಯೂ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯವಿಲ್ಲ. ಈ ಭಾಗದ ವಿದ್ಯಾರ್ಥಿಗಳು ಹಾಗೂ ರೈತರ ಮಕ್ಕಳಿಗೆ ಕೃಷಿ ವಿಜ್ಣಾನದಲ್ಲಿ ಪದವಿ ವ್ಯಾಸಂಗ ಮಾಡಿ, ಪದವಿ ಪಡೆಯಲು ಹಿನ್ನಡೆಯಾಗುತ್ತಿದೆ ಎಂದು ಹೇಳಿದರು.ಬ್ರಹ್ಮಾವರದಲ್ಲಿರುವ ಡಿಪ್ಲೋಮಾ ಕಾಲೇಜಿನಲ್ಲಿ ಸುಸಜ್ಜಿತವಾದ ಕಾಲೇಜು ಕಟ್ಟಡ, ಪ್ರಯೋಗ ಶಾಲೆ, ವಿದ್ಯಾರ್ಥಿ ನಿಲಯ ಸೌಲಭ್ಯ, ಪೀಠೋಪಕರಣಗಳು, ಇತರೆ ಮೂಲಸೌಕರ್ಯ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಲಭ್ಯವಿದ್ದು, ಸರ್ಕಾರಕ್ಕೆ ಅರ್ಥಿಕ ಹೊರೆಯಾಗದಂತೆ ಕೃಷಿ ಮಹಾವಿದ್ಯಾಲಯವನ್ನು ಸ್ಥಾಪಿಸಲು ಅವಕಾಶವಿದೆ ಎಂದರು.
ಕುಮ್ಕಿಹಕ್ಕು- ಗೇರು ಲೀಸ್ಜಿಲ್ಲೆಯ ರೈತರಿಗೆ ಕುಮ್ಕಿ ಹಕ್ಕು ಮತ್ತು ಗೇರು ಲೀಸ್ ಮಂಜೂರಾತಿ ಪತ್ರವನ್ನು ನೀಡಬೇಕು. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು 3 ಲಕ್ಷ ರು.ನಿಂದ 5 ಲಕ್ಷ ರು.ಗೆ ಏರಿಕೆ ಆದೇಶ ಅನುಷ್ಠಾನಗೊಂಡಿಲ್ಲ. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳಿಗೆ ರಕ್ಷಣೆ ಒದಗಿಸಲು ಸೋಲಾರ್ ಬೇಲಿಯನ್ನು ನಿರ್ಮಾಣ ಮಾಡಲು ಶೇ.90ರಷ್ಟು ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪ್ರದೀಪ್ ಹೆಬ್ಬಾರ್, ವೈಕುಂಠ ಹೇರಳೆ ಉಪಸ್ಥಿತರಿದ್ದರು.