ಜಮೀನುಗಳಲ್ಲಿ ಸರ್ಕಾರಿ ರಸ್ತೆ ಒತ್ತುವರಿ ಕೂಡಲೇ ತೆರವುಗೊಳಿಸಬೇಕು. ವೃದ್ಧಾಪ್ಯ ವೇತನ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಜನರಿಗೆ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ದಂಡಾಧಿಕಾರಿ ಅವರನ್ನು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ, ಹನೂರು

ಕಾಡಾನೆಗಳ ಹಾವಳಿ ಖಂಡಿಸಿ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು. ಮೆರವಣಿಗೆ ನಡೆಸಿದ ಕಾರ್ಯಕರ್ತರು ಧಿಕ್ಕಾರ ಕೂಗಿದರು.

ಪಟ್ಟಣದ ಕಾವೇರಿ ವನ್ಯಧಾಮ ಅರಣ್ಯ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಮತ್ತು ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಗೌಡಳ್ಳಿ ಸೋಮಣ್ಣ ಮಾತನಾಡಿ, ಹನೂರು ಉಪ ವಿಭಾಗ, ಕಾವೇರಿ ವನ್ಯಧಾಮ ಮತ್ತು ಬಿಆರ್‌ಟಿ ವಲಯ ಅರಣ್ಯದಂಚಿನ ರೈತರ ಜಮೀನಿಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಹುಲಿ, ಚಿರತೆಗಳು ಸಾಕುಪ್ರಾಣಿ ತಿಂದು ಭಯ ಹುಟ್ಟಿಸುತ್ತಿವೆ. ಕಾಡಾನೆ ಮತ್ತು ಹಂದಿಗಳು ರೈತರ ಜಮೀನಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ಚಿಕ್ಕರಾಜು ಮಾತನಾಡಿ, ಕೆವಿಎನ್ ದೊಡ್ಡಿ, ಕೆಂಚಯ್ಯನ ದೊಡ್ಡಿ, ಎಲ್ಲೇ ಮಾಳ ಹಾಗೂ ಸುತ್ತಮುತ್ತ ಕಾಡಾನೆಗಳು ಮುಸುಕಿನ ಜೋಳ ನಾಶಪಡಿಸುತ್ತಿವೆ. ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಡಿಸಿಎಫ್ ಸುರೇಂದ್ರ ಭೇಟಿ ನೀಡಿ, ಈ ವನ್ಯಜೀವಿ ಧಾಮಗಳ ವ್ಯಾಪ್ತಿಯರಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಅಂದಾಜು ಪಟ್ಟಿ ತಯಾರಿಸಿ ಕಳಿಸಲಾಗಿದೆ. ಕೂಡಲೇ ಕಾಮಗಾಳಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ದಂಡಾಧಿಕಾರಿ ಭೇಟಿ

ಜಮೀನುಗಳಲ್ಲಿ ಸರ್ಕಾರಿ ರಸ್ತೆ ಒತ್ತುವರಿ ಕೂಡಲೇ ತೆರವುಗೊಳಿಸಬೇಕು. ವೃದ್ಧಾಪ್ಯ ವೇತನ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಜನರಿಗೆ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ದಂಡಾಧಿಕಾರಿ ಅವರನ್ನು ಒತ್ತಾಯಿಸಿದರು.

ಸ್ಥಳಕ್ಕಾಗಮಿಸಿದ ತಾಲೂಕು ದಂಡಾಧಿಕಾರಿ ಚೈತ್ರಾ, ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಸಿಎಫ್ ಮರಿಸ್ವಾಮಿ, ಆರ್‌ಎಫ್ ನಾಗರಾಜ್, ರೈತ ಮುಖಂಡರಾದ ಸುಂದರಪ್ಪ, ರಾಜಗೋಪಾಲ, ಕೃಷ್ಣಯ್ಯ ಇನ್ನಿತರರು ಉಪಸ್ಥಿತರಿದ್ದರು.