ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ ಕಾಡುತ್ತಿದೆ. ಇದ್ದರಿಂದ ಸಂಕಷ್ಟದಲ್ಲಿರುವ ರೈತರು ಕಡಿಮೆ ನೀರಿನಲ್ಲಿ ಬೆಳೆಯುವಂಥ ಪರ್ಯಾಯ ಬೆಳೆಗಳನ್ನು ಮುಂದಾಗಬೇಕು. ಕೃಷಿ ಇಲಾಖೆ ಹೊರತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮುಂಗಾರು ಮಳೆ ವೈಫಲ್ಯದಿಂದ ತತ್ತರಿಸಿರುವ ರೈತರ ನೆರವಿಗಾಗಿ ಕೃಷಿ ಇಲಾಖೆ ಹೊರತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಕೃಷಿ ಇಲಾಖೆಯಿಂದ ಮುಂಗಾರು ಮಳೆ ಕೊರತೆಯಿಂದ ರೈತರು ಕೈಗೊಂಡಿರುವ ಮುಂಗಾರು ವೈಫಲ್ಯ, ಪರ್ಯಾಯ ಬೆಳೆ ಯೋಜನೆ ಪ್ರಚಾರದ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ ಕಾಡುತ್ತಿದೆ. ಇದ್ದರಿಂದ ಸಂಕಷ್ಟದಲ್ಲಿರುವ ರೈತರು ಕಡಿಮೆ ನೀರಿನಲ್ಲಿ ಬೆಳೆಯುವಂಥ ಪರ್ಯಾಯ ಬೆಳೆಗಳನ್ನು ಮುಂದಾಗಬೇಕು ಎಂದರು.

ಪ್ರಸ್ತಕ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವುದರಿಂದ ಕಾವೇರಿ ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚು ನೀರನ್ನು ಅಪೇಕ್ಷಿಸುವ ಬೆಳೆಗಳಾದ ಭತ್ತ ಹಾಗೂ ಕಬ್ಬಿನ ಬೆಳೆಗಳಿಗೆ ಬದಲಾಗಿ ಅರೆ ಖುಷ್ಕಿ ಬೆಳೆಗಳಾದ ರಾಗಿ, ಅಲಸಂದೆ, ಅವರೆ, ಸೂರ್ಯಕಾಂತಿ, ಮುಸುಕಿನ ಜೋಳ, ಹುರುಳಿ ಬೆಳೆಗಳನ್ನು ಸಂದರ್ಭಕ್ಕೆ ಅನುಸಾರವಾಗಿ ಬೆಳೆಯಲು ರೈತರು ಚಿಂತನೆ ನಡೆಸಬೇಕು ಎಂದು ಕರೆ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಮಾತನಾಡಿ, ನೀರಾವರಿ ಹಾಗೂ ಮಳೆಯಾಶ್ರಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ವಿವಿಧ ಬೆಳೆ ಬೆಳೆಯಬಹುದಾಗಿದೆ. ಕೃಷಿ ಇಲಾಖೆಯಿಂದ ಸಿಗುವ ಮಾಹಿತಿ ಮತ್ತು ಸೌಲಭ್ಯಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರದಿಂದ ಪಡೆಯಬಹುದು. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ತಮ್ಮ ಜಮೀನನ್ನು ಕಡ್ಡಾಯವಾಗಿ ಸಮೀಕ್ಷೆಗೆ ಒಳಪಡಿಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕೃಷಿ ಇಲಾಖೆ ಉಪ ನಿರ್ದೇಶಕಿ ಮಾಲತಿ, ಕೃಷಿ ಅಧಿಕಾರಿ ರಾಜೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಅಧಿಕಾರಿಗಳು ಹಾಗೂ ಮುಖಂಡರು ಪಾಲ್ಗೊಂಡಿದ್ದರು.