ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಮಾಸ್ತಿಹೊಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಜಾನುವಾರುಗಳೊಂದಿಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಮಾಸ್ತಿಹೊಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಜಾನುವಾರುಗಳೊಂದಿಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ಕಳೆದ ರಾತ್ರಿ ಆರಂಭವಾದ ಅಹೋರಾತ್ರಿ ಧರಣಿ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟ ಮತ್ತಷ್ಟು ತೀವ್ರ ಪಡೆದುಕೊಂಡಿದೆ. ಈ ವೇಳೆ ಮಾಸ್ತಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ 500ಕ್ಕೂ ಹೆಚ್ಚು ರೈತರು ನೀರಾವರಿ ಇಲಾಖೆ ಕಚೇರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರೈತರು ಜಾನುವಾರುಗಳ ಜೊತೆಗೆ ನಗರದ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಪರಿಹಾರ ನೀಡುವಂತೆ ಒತ್ತಾಯ:ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ತಮ್ಮ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೆ ಸಮರ್ಪಕ ಪರಿಹಾರ ನೀಡಿಲ್ಲ ಎಂದು ರೈತರು ಆರೋಪಿಸಿದರು. ಭೂಮಿ ಕಳೆದುಕೊಂಡ ಎಲ್ಲ ರೈತರಿಗೆ ನ್ಯಾಯಯುತ ಪರಿಹಾರ, ಪುನರ್ವಸತಿ ಹಾಗೂ ಬಾಕಿ ಇರುವ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅವರು ಒತ್ತಾಯಿಸಿದರು.
ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ನೀರಾವರಿ ಕಚೇರಿ ಆವರಣದಲ್ಲೇ ಅಡುಗೆ ಹಾಗೂ ಉಪಹಾರ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಇದರ ನಡುವೆ ನೀರಾವರಿ ಇಲಾಖೆ ಎದುರು ಜಾನುವಾರುಗಳೊಂದಿಗಿನ ರೈತರ ಪ್ರತಿಭಟನೆಯು ಸಾರ್ವಜನಿಕರ ಗಮನ ಸೆಳೆಯಿತು.ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಮಾಸ್ತಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ ಅನೇಕ ಸಂಖ್ಯೆಯಲ್ಲಿ ಮಹಿಳಾ ರೈತರು ಭಾಗವಹಿಸಿದ್ದರು.ತಮ್ಮ ಜಾನುವಾರುಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಎದುರು ತಮ್ಮ ಸಮಸ್ಯೆಗಳು ಹಾಗೂ ನೀರಾವರಿ ಇಲಾಖೆಯಲ್ಲಿ ನಡೆದಿರುವ ಬೆಳವಣಿಗೆಗಳನ್ನೂ ವಿವರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ನೀರಾವರಿ ಇಲಾಖೆಯಲ್ಲಿ ನಡೆದಿರುವ ಘಟನಾವಳಿಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಡಿಸಿ ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ರೈತರು, ತಮ್ಮ ಬೇಡಿಕೆಗಳು ಈಡೇರುವವರೆಗೆ ನೀರಾವರಿ ಇಲಾಖೆ ಆವರಣದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನೀರಾವರಿ ಇಲಾಖೆ ಅಧಿಕಾರಿಗಳನ್ನು ಕರೆಸಿ ರೈತರ ಸಮ್ಮುಖದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು. ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾ ನಿರತ ರೈತರಿಗೆ ಭರವಸೆ ನೀಡಿದರು.ರೈತ ಮುಖಂಡ ಬಾಳೇಶ ಮಾವನೂರೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಧರಣಿಯಲ್ಲಿ ಸಂತೋಷ ಪಾಟೀಲ್, ಮಲಗೌಡ ಪಾಟೀಲ್, ಬಾಳೇಶ ಪಾಟೀಲ್, ಉದಯ ಹಿರೇಮಠ, ಸಿದ್ಧಲಿಂಗ ಬೆನ್ನಾಡಿ, ರಾಜು ಹುದ್ದಾರ, ಬರಮಾ ಮುಂಗಾರಿ, ಬಾಳೇಶ ಪಾಚ್ಚಾಪುರೆ, ಪತ್ರೆಪ್ಪ ಮಾಲಾದಾನಿ, ಸುನೀಲ್ ಕೋಳಿ, ದುಂಡಪ್ಪ ಪಾಟೀಲ್ ಬಾಳೇಶ ಹಲಕರಣಿ, ಬಾಳೇಶ ಬಂಬರಗಿ, ಅಪ್ಪಯ್ಯ ಗುತ್ತಿ, ನಿಂಗಣ್ಣಗೌಡ ಪಾಟೀಲ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದದ್ದರು.