ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಕೇಂದ್ರ ಸರ್ಕಾರ ನೀಡಿರುವ ರಸಗೊಬ್ಬರ ಹಾಗೂ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಿ ರೈತರಿಗೆ ವಂಚಿಸಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ 29 ರಂದು ಮಂಗಳವಾರ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಸೋಮವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ , ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬೆಳಿಗ್ಗೆ 10.30 ಕ್ಕೆ ಬಿಜಿಎಸ್ ವೃತ್ತದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆಸುವ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವರು.ಬಿಜೆಪಿ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು ಹಾಗೂ ಪಕ್ಷದ ವಿವಿಧ ಮುಖಂಡರು, ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು.ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ನೀಡಲಾಗುವುದು ಎಂದು ಹೇಳಿದರು.ರಾಜ್ಯಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಸಮಸ್ಯೆ ನಿವಾರಣೆಯ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ರೈತಪರ ಯೋಜನೆಗಳನ್ನು ಈ ಸರ್ಕಾರ ಸ್ಥಗಿತಗೊಳಿಸಿದೆ. ರೈತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದೆ. 52 ಲಕ್ಷರೈತರಿಗೆ ಬಿಜೆಪಿ ಸರ್ಕಾರ ನೀಡುತ್ತಿದ್ದ 4 ಸಾವಿರ ರು. ಕಿಸಾನ್ ಸಮ್ಮಾನ್ ನಿಧಿಯನ್ನು ನಿಲ್ಲಿಸಿದೆ. ರೈತರ ಪಂಪ್ಸೆಟ್ಗೆ ಟಿಸಿ ಳವಡಿಸಲು ಬಿಜೆಪಿ ಸರ್ಕಾರದಲ್ಲಿ 2500 ರೂ. ನಿಗದಿಪಡಿಸಿತ್ತು. ಇಂದಿನ ಕಾಂಗ್ರೆಸ್ ಸರ್ಕಾರ ಒಂದು ಪಂಪ್ಸೆಟ್ಗೆ ಟಿಸಿ ಅಳವಡಿಸಲು 3 ಲಕ್ಷ ರು.ನಿಗದಿ ಮಾಡವ ಮೂಲಕ ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದರು.ಶಾಸಕ ಬಿ.ಸುರೇಶ್ಗೌಡರು ಮಾತನಾಡಿ, ಈ ಬಾರಿ ಮುಂಗಾರು ಉತ್ತಮ ಎಂದು ಹವಾಮಾನ ಇಲಾಖೆ ಮೂರು ತಿಂಗಳ ಮೊದಲೇ ಹೇಳಿದರೂ ಪೂರ್ವ ಸಿದ್ಧತೆ ಮಾಡಿಕೊಳ್ಳದೆ, ಅಗತ್ಯವಿರುವಷ್ಟು ಗೊಬ್ಬರ ದಾಸ್ತಾನು ಮಾಡಿಕೊಳ್ಳುವ ಪ್ರಯತ್ನ ಮಾಡಿಲ್ಲ. ಕೃಷಿ ಸಚಿವರು ಎಲ್ಲಾ ಜಿಲ್ಲೆಗಳ ಪ್ರವಾಸ ಮಾಡಿ ರೈತರ ಸ್ಥಿತಿಗತಿ ಮಾಹಿತಿ ಪಡೆಯಬೇಕು. ಕೃಷಿ ಸಚಿವ ಚಲುವರಾಯಸ್ವಾಮಿ ಮಂಡ್ಯ-ಬೆಂಗಳೂರು ನಡುವೆ ಓಡಾಡಿಕೊಂಡು ರಾಜಕೀಯ ಮಾಡಿಕೊಂಡಿದ್ದಾರೆ. ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ಈಗ ಹೇಳಿದರೆ ಹೇಗೆ? ಇಷ್ಟುದಿನ ಏನು ಮಾಡುತ್ತಿದ್ದೀರಿ? ಗಡ್ಡಕ್ಕೆ ಬೆಂಕಿ ಬಿದ್ದಾಗ ಬಾವಿ ತೋಡುವ ಸರ್ಕಾರ ನಿಮ್ಮದು ಎಂದು ವಾಗ್ದಾಳಿ ಮಾಡಿದರು.ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಎರಡು ವರ್ಷಗಳಲ್ಲಿ ಕೇವಲ ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದು ಹೊರತಾಗಿ ಇನ್ನೇನೂ ಮಾಡಿಲ್ಲ, ಏಕೆಂದರೆ, ಕೆಲಸ ಮಾಡಲು ಇವರ ಬಳಿ ಹಣವಿಲ್ಲ. ಪ್ರಧಾನಿ ಮೋದಿಯನ್ನು ದೂರುತ್ತಾ ಕಾಲ ಕಳೆಯುತ್ತಿದ್ದಾರೆ. ನೀವು ಯಾವ ಮುಖ ಇಟ್ಟುಕೊಂಡು ಸಾಧನಾ ಸಮಾವೇಶ ಮಾಡುದ್ದೀರಿ? ಏನು ಸಾಧನೆ ಮಾಡಿದ್ದೀರೆಂದು ಜನರ ಮುಂದೆ ಹೋಗುವಿರಿ? ನಿಮ್ಮ ಸಾಧನೆ ಏನೆಂದು ರಾಜ್ಯದ ಜನರಿಗೆ ಗೊತ್ತಾಗಿದೆ, ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ರೈತ ಮೋರ್ಚಾರಾಜ್ಯಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಹಿರಿಯಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಗ್ರಾಮಾಂತರಅಧ್ಯಕ್ಷರಾಜಶೇಖರ್, ಜಿಲ್ಲಾ ಮಾಧ್ಯಮ ಪ್ರಮುಖ ಜೆ.ಜಗದೀಶ್, ಮುಖಂಡರಾದ ವಿಜಯಕುಮಾರ್, ಮರಿತಿಮ್ಮಯ್ಯ, ಶಂಕರ್, ಶಿವರಾಜ್ ಹಾಜರಿದ್ದರು.