ಚನ್ನಪಟ್ಟಣ: ಮಳೆ ಅಭಾವದಲ್ಲಿಯೂ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಮುಂದಿನ ೧೫ ದಿನ್ಳ ಕಾಲ ಪ್ರತಿದಿನ ೩೫೦೦ ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನೀಡಿರುವ ಆದೇಶ ಅವೈಜ್ಞಾನಿಕವಾಗಿದ್ದು, ಯಾವುದೇ ಕಾರಣಕ್ಕೂ ನೀರು ಬಿಡಬಾರದೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ರಾಜ್ಯ ಹಿಂದೆಂದು ಕಾಣದ ಬರ ಎದುರಿಸುತ್ತಿದೆ. ಇಂತಹ ಸಮಯದಲ್ಲಿ ಸಿಡಬ್ಲ್ಯೂಆರ್‌ಸಿ ತಮಿಳುನಾಡಿಗೆನೀರು ಬಿಡುವಂತೆ ಅವೈಜ್ಞಾನಿಕ ಆದೇಶ ನೀಡಿರುವುದು ರಾಜ್ಯ ದುರದೃಷ್ಟ. ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂದು ಸಮೀಕ್ಷೆ ನಡೆಸದೇ ಏಕಪಕ್ಷಿಯ ಆದೇಶ ನೀಡಿದೆ. ರಾಜ್ಯದ ಮುಖ್ಯಮಂತ್ರಿಗಳು ರೈತರ ಹಿತ ಕಾಯಬೇಕು. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಆಗ್ರಹಿಸಿದರು.

ತಮಿಳುನಾಡಿಗೆ ಪ್ರತಿನಿತ್ಯ ೩೫೦೦ ಕ್ಯೂಸೆಕ್‌ ನೀರು ತಲುಪಬೇಕೆಂದರೆ, ಇಲ್ಲಿಂದ ಪ್ರತಿನಿತ್ಯ ಸುಮಾರು ೫ ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಹರಿಸಬೇಕಾಗುತ್ತದೆ. ಈ ರೀತಿ ಮಾಡಿದರೆ ರಾಜ್ಯದ ಜನರಿಗೆ ಕುಡಿಯುಲು ನೀರಿಲ್ಲದಂತಾಗುತ್ತದೆ. ಸಿಎಂ ರಾಜ್ಯದ ಹಿತ ಕಾಯುವ ಬದ್ಧತೆ ಪ್ರದರ್ಶಿಬೇಕು ಎಂದು ಆಗ್ರಹಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ. ರಾಜ್ಯದ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಿದ್ದೇ ಆದಲ್ಲಿ ಮುಂದೆ ರಾಜ್ಯಾದ್ಯಂತ ಉಗ್ರ ಚಳವಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ತಮಿಳುನಾಡಿಗೆ ನೀರು ಹರಸದಂತೆ ಆಗ್ರಹಿಸಿ ಗ್ರೇಡ್-೨ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೃಷ್ಣಯ್ಯ, ತಿಮ್ಮೇಗೌಡ, ಪುಟ್ಟಸ್ವಾಮಿ ಗೋಪಾಲ್, ವೆಂಕಟಪ್ಪ, ಚಂದ್ರಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.


ಪೊಟೋ೩೧ಸಿಪಿಟಿ೧: ಚನ್ನಪಟ್ಟಣದ ತಾಲೂಕು ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.