ಕೆಆರ್‌ಎಸ್‌ ಅಣೆಕಟ್ಟು ಅಚ್ಚುಕಟ್ಟಿನ ನಾಲಾ ಬಯಲಿನಲ್ಲಿ ಬೆಳೆದಿರುವ ಕಬ್ಬು, ಭತ್ತ ಮತ್ತಿತರ ಬೆಳೆಗಳಿಗೆ ಒಂದು ಅಥವಾ ಎರಡು ಕಟ್ಟು ನೀರಿನ ಅವಶ್ಯಕತೆ ಇದೆ. ಈ ಬೆಳೆಗಳಿಗೆ ನೀರು ಒದಗಿಸದಿದ್ದರೆ ರೈತ ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ನೀರಿಲ್ಲದೆ ಒಣಗಿ ಹೋಗುತ್ತದೆ. ಸರ್ಕಾರ ಮತ್ತು ಜಿಲ್ಲಾಡಳಿತ ರೈತರ ಪರಿಸ್ಥಿತಿ ಅರ್ಥ ಮಾಡಿಕೊಂಡು ನಾಲೆಗಳಿಗೆ ನೀರು ಹರಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮಳೆ ಇಲ್ಲದೆ ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಕೆಆರ್‌ಎಸ್‌ ಜಲಾಶಯ ವ್ಯಾಪ್ತಿಯ ಎಲ್ಲಾ ನಾಲೆಗಳಿಗೆ ತಕ್ಷಣ ಒಂದು ಕಟ್ಟು ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಕಾರ್ಯಕರ್ತರು ಸೋಮವಾರ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ರೈಲ್ವೆ ನಿಲ್ದಾಣದ ಬಳಿ ಸೇರಿದ ಕಾರ್ಯಕರ್ತರು, ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಒಂದು ಕಟ್ಟು ನೀರಿನ ಅವಶ್ಯಕತೆ ಇದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಕೆಆರ್‌ಎಸ್‌ ಅಣೆಕಟ್ಟು ಅಚ್ಚುಕಟ್ಟಿನ ನಾಲಾ ಬಯಲಿನಲ್ಲಿ ಬೆಳೆದಿರುವ ಕಬ್ಬು, ಭತ್ತ ಮತ್ತಿತರ ಬೆಳೆಗಳಿಗೆ ಒಂದು ಅಥವಾ ಎರಡು ಕಟ್ಟು ನೀರಿನ ಅವಶ್ಯಕತೆ ಇದೆ. ಈ ಬೆಳೆಗಳಿಗೆ ನೀರು ಒದಗಿಸದಿದ್ದರೆ ರೈತ ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ನೀರಿಲ್ಲದೆ ಒಣಗಿ ಹೋಗುತ್ತದೆ. ಸರ್ಕಾರ ಮತ್ತು ಜಿಲ್ಲಾಡಳಿತ ರೈತರ ಪರಿಸ್ಥಿತಿ ಅರ್ಥ ಮಾಡಿಕೊಂಡು ನಾಲೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ಮನುಷ್ಯನಿಗೆ ಬದುಕಲು ಗಾಳಿ, ನೀರು ಮತ್ತು ಆಹಾರ ಬಹಳ ಮುಖ್ಯ. ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಆಹಾರ ಭದ್ರತೆಯು ಅಷ್ಟೇ ಮುಖ್ಯವಾಗಿದೆ. ಈ ಹಿಂದೆ ಕೆ.ಎಸ್. ಪುಟ್ಟಣ್ಣಯ್ಯಅವರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ 2 ಅಣೆಕಟ್ಟೆಯಲ್ಲಿ 74 ಅಡಿ ನೀರಿನ ಸಂಗ್ರವಿದ್ದಾಗಲೂ ನಾಲೆಗಳಿಗೆ ನೀರು ಹರಿಸಿ ರೈತರ ಹಿತಕ್ಕೆ ಮನ್ನಣೆ ನೀಡಲಾಗಿತ್ತು. ಸದ್ಯ ಜಲಾಶಯದಲ್ಲಿ ಅಂದಿಗಿಂತಲೂ ಹೆಚ್ಚಿನ ನೀರಿನ ಸಂಗ್ರಹವಿದೆ. ಹೀಗಾಗಿ ನಾಲೆಗಳಿಗೆ ತಕ್ಷಣ ನೀರು ಹರಿಸಿ ರೈತರ ಹಿತಕಾಪಾಡಬೇಕುಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತಸಂಘ ತಾಲೂಕು ಅಧ್ಯಕ್ಷ ವೈ.ಪಿ.ಮಂಜು, ಉಪಾಧ್ಯಕ್ಷ ವೈ.ಜಿ.ರಘು, ಜಿಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಮುಖಂಡರಾದ ಎಸ್.ದಯಾನಂದ್, ಅರಳಕುಪ್ಪೆ ರೂಪ, ಹರವು ಪ್ರಕಾಶ್, ಕೆನ್ನಾಳು ನಾಗರಾಜು, ವಿಜಯಕುಮಾರ್‌ ಇತರರು ಇದ್ದರು.