ಮಳೆ ಕೊರತೆಯ ಹಿನ್ನೆಲೆಯಲ್ಲಿ ದೀರ್ಘಾವಧಿ ಬೆಳೆಗಳಿಗೆ ನೀರು ಒದಗಿಸುವುದು ಕಷ್ಟ. ಆದ ಕಾರಣ ರಾಗಿ, ಜೋಳ, ಎಳ್ಳು, ಅಲಸಂದೆ, ಉದ್ದು ಹಾಗೂ ಅರ್ಕ ಸೇರಿದಂತೆ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಅರೆ ಖುಷ್ಕಿ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು. ಪ್ರಸ್ತುತ ಮಳೆ ಕೊರತೆಯ ಪರಿಸ್ಥಿತಿಯಲ್ಲಿ ಇಂತಹ ಬೆಳೆಗಳು ರೈತರಿಗೆ ಅನುಕೂಲವಾಗಲಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಂಗಾರು ಮಳೆ ವೈಫಲ್ಯದಿಂದ ದೀರ್ಘಾವಧಿ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ರೈತರು ದೀರ್ಘಾವಧಿ ಬೆಳೆಗಳ ಬದಲಿಗೆ ಕಡಿಮೆ ಅವಧಿಯಲ್ಲಿ ಹಾಗೂ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಪರ್ಯಾಯ ಮತ್ತು ಅರೆ ಖುಷ್ಕಿ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಳೆ ಕೊರತೆಯ ಹಿನ್ನೆಲೆಯಲ್ಲಿ ದೀರ್ಘಾವಧಿ ಬೆಳೆಗಳಿಗೆ ನೀರು ಒದಗಿಸುವುದು ಕಷ್ಟ. ಆದ ಕಾರಣ ರಾಗಿ, ಜೋಳ, ಎಳ್ಳು, ಅಲಸಂದೆ, ಉದ್ದು ಹಾಗೂ ಅರ್ಕ ಸೇರಿದಂತೆ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಅರೆ ಖುಷ್ಕಿ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು. ಪ್ರಸ್ತುತ ಮಳೆ ಕೊರತೆಯ ಪರಿಸ್ಥಿತಿಯಲ್ಲಿ ಇಂತಹ ಬೆಳೆಗಳು ರೈತರಿಗೆ ಅನುಕೂಲವಾಗಲಿವೆ ಎಂದರು.

ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೆರೆ-ಕಟ್ಟೆಗಳಲ್ಲಿ ಲಭ್ಯವಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ನೀರಿಗೆ ಮತ್ತು ಅರೆಕಾಲಿಕ ಬೆಳೆಗಳಿಗೆ ಆದ್ಯತೆಯ ಮೇರೆಗೆ ಬಳಸಲು ತೀರ್ಮಾನಿಸಲಾಗಿದೆ. ದೀರ್ಘಾವಧಿ ಬೆಳೆಗಳಿಗೆ ನೀರು ಒದಗಿಸುವುದನ್ನು ಸದ್ಯಕ್ಕೆ ಪರಿಗಣಿಸಲಾಗುವುದಿಲ್ಲ. ಕೇವಲ ನಾಲ್ಕು ಕಟ್ಟು ನೀರು ಹರಿಸಲು ನಿರ್ಧರಿಸಿರುವುದರಿಂದ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಸಂರಕ್ಷಿಸುವುದು ಅಗತ್ಯವಾಗಿದೆ ಎಂದರು.

ಅಂತರ್ಜಲ ಮಟ್ಟ ಕುಸಿಯುವುದನ್ನು ತಡೆಯಲು ಅಗತ್ಯವಿರುವ ಗ್ರಾಮಗಳಲ್ಲಿ ಕೆರೆ-ಕಟ್ಟೆಗಳಲ್ಲಿ ನೀರು ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕೃಷಿ ಇಲಾಖೆಯ ಅಧಿಕಾರಿಗಳು ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ರೈತರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಹಾಗೂ ಅರೆಕಾಲಿಕ ಬೆಳೆಗಳನ್ನು ಬೆಳೆಯುವ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.