H.R. Basavarajappa, President of the State Farmers' Association, announced that a massive protest and road blockade would be held at Shivappa Nayaka Circle on August 10 at 10:30 AM. The event is organized by the Samyukta Kisan Morcha and the Joint Committee of Central Trade Unions under the slogan "Corporates, Quit the Country, " in opposition to neo-colonial corporate rule.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನವ ವಸಹಾತುಶಾಹಿ ಕಾರ್ಪೋರೇಟ್ ಆಳ್ವಿಕೆ ವಿರುದ್ಧ ಕಾರ್ಪೋರೇಟ್‌ಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಯಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಕರೆಯ ಮೇರೆಗೆ ಆ.10 ರಂದು ಬೆಳಗ್ಗೆ 10.30ಕ್ಕೆ ಶಿವಪ್ಪನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೆಡೆ ರೈತ ವಿರೋಧಿ, ಕಾರ್ಮಿಕ ವಿರೋಧಿ, ದಲಿತ ವಿರೋಧಿ, ಮಹಿಳಾ ವಿರೋಧಿ ಒಟ್ಟಾರೆ ಜನ ವಿರೋಧಿ ಕಾನೂನುಗಳನ್ನು, ನೀತಿಗಳನ್ನು ಜಾರಿ ಮಾಡುತ್ತಿರುವಾಗಲೆ ಇನ್ನೊಂದೆಡೆ ಜನತೆಯ ಪ್ರಜಾಪ್ರಭುತ್ವದ ಹಕ್ಕುಗಳನ್ನು ಧಮನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ, ಕಾರ್ಪೋರೆಟ್ ಭೂ ಕಬಳಿಕೆ ವಿರೋಧಿಸಿ, ಕಾರ್ಮಿಕ ವಿರೋಧ ಕನಿಷ್ಠ ಕೂಲಿ ಪರಿಷ್ಕರಣೆ ವಿರೋಧಿಸಿ ಬೀಜ ಕಾಯ್ದೆ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ರಸಗೊಬ್ಬರ, ಡಿಸೇಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಹಾಗೂ ಎಲ್ಲಾ ವಲಯಗಳಲ್ಲಿ ಹೆಚ್ಚುತ್ತಿರುವ ಖಾಸಗೀಕರಣ ಮತ್ತು ಕಾರ್ಪೋರೆಟ್ ಶೋಷಣೆ ಮೇಲೆ ಸೂಕ್ತ ನಿಯಂತ್ರಣ ಹಾಕುವಂತೆ ಬ್ಯಾಂಕ್, ವಿಮಾ, ಆರೋಗ್ಯ, ಶಿಕ್ಷಣ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿದರು.

ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಗೆ ಸವಾಲಾಗಿದ್ದ ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ದೇಶಾದ್ಯಂತ ಆ.10 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.

ಸಿಐಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಭೂಮಿಯನ್ನು ಅಂಬಾನಿ, ಅದಾನಿ ಮುಂತಾದ ದೇಶಿಯ ಹಾಗೂ ವಿದೇಶಿ ಕಂಪನಿಗಳ ಬಕಾಸುರರ ಬಾಯಿಗೆ ಹಾಕುತ್ತಿದೆ. ಇದರಿಂದ ಇಡೀ ದೇಶದ ಸಮಸ್ತ ಕಾರ್ಮಿಕ ವರ್ಗವನ್ನು ಜೀತ ಪದ್ಧತಿಯ ಕಾಲಕ್ಕೆ ನೂಕಲಾಗುತ್ತಿದೆ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದರಿಂದ ಕಾರ್ಮಿಕರ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.

ಗೋಷ್ಠಿಯಲ್ಲಿ ಬಿಸಿಯೂಟ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹನುಮಮ್ಮ, ಕರ್ನಾಟಕ ಜನ ಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಘವೇಂದ್ರ, ರಾಜ್ಯ ರೈತ ಸಂಘದ ಮಹಿಳಾ ಸಂಚಾಲಕಿ ಭಾಗ್ಯ ರಾಘವೇಂದ್ರ, ಪ್ರಮುಖರಾದ ಶೇಷಪ್ಪ, ಚಂದ್ರಪ್ಪ, ಹರೀಶ್ ಇನ್ನಿತರರು ಉಪಸ್ಥಿತರಿದ್ದು.

------------------

ಪೊಟೋ: 06ಎಸ್‌ಎಂಜಿಕೆಪಿ08

ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿದರು.