ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾದ ಜೋಳದ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾದ ಜೋಳದ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜೋಳವನ್ನು ಸರ್ಕಾರಕ್ಕೆ ಮಾರಾಟ ಮಾಡಿ ಮೂರು ತಿಂಗಳಾದರೂ ರೈತರಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಸಾಲ ಮರುಪಾವತಿ, ಮುಂದಿನ ಬೆಳೆಗಾಗಿ ಅಗತ್ಯ ಸಿದ್ಧತೆಗಳು ಹಾಗೂ ಕುಟುಂಬ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಜೋಳ ಖರೀದಿಯ ಎಲ್ಲ ಬಾಕಿ ಹಣವನ್ನು ಯಾವುದೇ ವಿಳಂಬವಿಲ್ಲದೆ ರೈತರ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದ್ ಹಾಗೂ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ತೀವ್ರ ಬರ ಎದುರಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಆಲಿಸುವುದು ಬಿಟ್ಟು ಬರೀ ಸಚಿವ ಸಂಪುಟ ವಿಸ್ತರಣೆ ಮತ್ತಿತರ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿರುವುದು ಖಂಡನೀಯ. ಕೂಡಲೇ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಬರಗಾಲ ನಿರ್ವಹಣೆಗೆ ಆದ್ಯತೆ ನೀಡಬೇಕು. ರೈತರು ಬದುಕಿಗಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿ ಉದ್ಯೋಗ ದೊರೆಯಲು ಪೂರಕ ಕ್ರಮಗಳನ್ನು ವಹಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರು, ಜಿಲ್ಲಾಡಳಿತ ಮೂಲಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಕಳುಹಿಸಿದರು.

ನರೇಗಾ ಉಳಿಸಿ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಕಲ್ಲುಕಂಬ ಪಂಪಾಪತಿ, ರೈತ ಮುಖಂಡರಾದ ಪಂಪನಗೌಡ, ಜನಾರ್ದನರೆಡ್ಡಿ, ರಾಜಶೇಖರ ಗೌಡ, ದೊಡ್ಡ ಬಸವನಗೌಡ , ಕೆ. ವೀರನಗೌಡ, ಭೀಮಲಿಂಗಪ್ಪ, ನಾಗರಾಜ್, ಗವಿಸಿದ್ದನಗೌಡ, ಮಲ್ಲಿಕಾರ್ಜುನ, ಸುರೇಶ್ ಗೌಡ, ಮಲ್ಲಪ್ಪ ಸೇರಿದಂತೆ ವಿವಿಧ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.