ಆಲಮಟ್ಟಿ: ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ರೈತರಿಗೆ ನೋಟಿಸ್ ನೀಡದೆ ಕಾಮಗಾರಿ ಆರಂಭಿಸಿರುವುದನ್ನು ಖಂಡಿಸಿ ಹಾಗೂ ಬಾಕಿ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲು ಆಗ್ರಹಿಸಿ ಮೇ 5ರಂದು ಆಲಮಟ್ಟಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ನೂತನ ಜಿಲ್ಲಾಧ್ಯಕ್ಷ ಉಮೇಶ ಎಸ್. ವಾಲೀಕಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಸವನ ಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಯ ಮುಳವಾಡ ಏತ ನೀರಾವರಿ ಯೋಜನೆಯ ಸಂಕನಾಳ ಶಾಖಾ ಕಾಲುವೆ ಕಣಕಾಲ ಭಾಗದಲ್ಲಿ ಹಾದು ಹೋಗಿದೆ. ಈ ಕಾಲುವೆಯ ಅಂದಾಜು 8 ಕಿಮೀ ಕಾಮಗಾರಿ ಇನ್ನೂ ಬಾಕಿ ಉಳಿದಿದೆ. ಅಖಂಡ ಕರ್ನಾಟಕ ರೈತ ಸಂಘದ ನಿರಂತರ ಹೋರಾಟದ ಫಲವಾಗಿ ಬಾಕಿ ಉಳಿದ ಕಾಲುವೆ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಆದರೆ ಸಂಬಂಧಪಟ್ಟ ರೈತರಿಗೆ ಯಾವುದೇ ನೋಟಿಸ್ ನೀಡದೆ ಕಾಮಗಾರಿ ಆರಂಭಿಸಿದ್ದರಿಂದ ರೈತರು ಆಕ್ಷೇಪ ವ್ಯಕ್ತಪಡಿಸಿ, ನೋಟಿಸ್ ನೀಡುವವರೆಗೂ ಕಾಮಗಾರಿಗೆ ತಡೆ ಒಡ್ಡಿದ್ದಾರೆ.

ಆದ್ದರಿಂದ ಜಮೀನು ಕಳೆದುಕೊಂಡ ರೈತರಿಗೆ ಕೂಡಲೇ ನೋಟಿಸ್ ನೀಡಿ, ಬಾಕಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಮೇ 5, 2026ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಆಲಮಟ್ಟಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಎಸ್‌ಎಲ್‌ಒ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ವಾಲೀಕಾರ ತಿಳಿಸಿದ್ದಾರೆ.