ಸೊ.ಶಿ.ಪ್ರಕಾಶ್ ಮಾತನಾಡಿ, 2018 ರಲ್ಲಿ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಕೊಡಬೇಕಾದ ₹150 ಬಾಕಿ ಉಳಿಸಿಕೊಂಡಿದ್ದಾರೆ. ಕೋರ್ಟ್ ಮೆಟ್ಟಿಲೇರಿರುವುದು ಖಂಡನೀಯ. ಕೂಡಲೇ ಬಡ್ಡಿ ಸಮೇತ ಹಣವನ್ನು ರೈತರಿಗೆ ಕೊಡಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಕಾರ್ಯಕರ್ತರು ತಾಲೂಕಿನ ಕೊಪ್ಪ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಎಚ್.ಎಸ್.ಪ್ರಭುಲಿಂಗು ಮಾತನಾಡಿ, ರೈತರು ಕಟಾವು ಮಾಡಿ 2 ತಿಂಗಳಾದರೂ ರೈತರಿಗೆ ಕಬ್ಬಿನ ಹಣ ಕೊಟ್ಟಿಲ್ಲ. ತಕ್ಷಣ ಸಕ್ಕರೆ ಕಾಯಿದೆ ಪ್ರಕಾರ 14 ದಿನಕ್ಕೆ ಕೊಡಬೇಕಾದ ಹಣವನ್ನು ವಿಳಂಬ ಮಾಡಲಾಗುತ್ತಿದೆ. ತಕ್ಷಣ ರೈತರ ಖಾತೆಗಳಿಗೆ ಹಣ ಪಾವತಿಸಬೇಕೆಂದು ಆಗ್ರಹಿಸಿದರು.

ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ 2025- 26 ನೇ ಸಾಲಿನ ಕಬ್ಬು ಬೆಳೆಗಾರರ ಬಾಕಿ ಪ್ರೋತ್ಸಾಹ ಧನ ಟನ್ ಕಬ್ಬಿಗೆ ₹50 ನಂತೆ ಒಟ್ಟು ₹250 ಕೋಟಿ ಬಾಕಿ ಉಳಿಸಿಕೊಂಡಿದ್ದು ಶೀಘ್ರ ರೈತರಿಗೆ ನೀಡಬೇಕೆಂದು ಒತ್ತಾಯಿಸಿದರು.

ಸೊ.ಶಿ.ಪ್ರಕಾಶ್ ಮಾತನಾಡಿ, 2018 ರಲ್ಲಿ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಕೊಡಬೇಕಾದ ₹150 ಬಾಕಿ ಉಳಿಸಿಕೊಂಡಿದ್ದಾರೆ. ಕೋರ್ಟ್ ಮೆಟ್ಟಿಲೇರಿರುವುದು ಖಂಡನೀಯ. ಕೂಡಲೇ ಬಡ್ಡಿ ಸಮೇತ ಹಣವನ್ನು ರೈತರಿಗೆ ಕೊಡಬೇಕು ಎಂದು ಒತ್ತಾಯಿಸಿದರು.

ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಶೀಘ್ರ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಮುಂದಿನ ದಿನಗಳಲ್ಲಿ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾರ್ಖಾನೆ ಉಪಾಧ್ಯಕ್ಷ ರಾಮಚಂದ್ರ ರಾವ್, ಜನರಲ್ ಮ್ಯಾನೇಜರ್ ಚಂದ್ರಶೇಖರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಿಮ್ಮ ಬೇಡಿಕೆಗಳನ್ನು ಶೀಘ್ರ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಮುಖಂಡರಾದ ರಾಮಲಿಂಗೇಗೌಡ, ಶಿವಳ್ಳಿ ಚಂದ್ರು, ಬೂದನೂರು ಪುಟ್ಟಸ್ವಾಮಿ, ಕುಣಿಗಲ್ ಕರಿಗೌಡ, ಯೋಗೇಶ್, ರಾಮಲಿಂಗು, ರಾಮೇಗೌಡ, ಶಿವರಾಮು, ಶಿವಲಿಂಗಯ್ಯ, ಕುಮಾರ್, ಚಂದ್ರಶೇಖರ್ ಸೇರಿ ಇತರರು ಇದ್ದರು.