ಮುಂಡರಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಶನಿವಾರ ಮುಂಡರಗಿ ತಾಲೂಕು ಕೃಷಿ ಪರಿಕರ ಮಾರಾಟಗಾರರಿಗೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಕೆ ಕಿಸಾನ್ ತಂತ್ರಾಂಶದಲ್ಲಿ ಯೂರಿಯಾ ಗೊಬ್ಬರ ವಿತರಣೆ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.

ಮುಂಡರಗಿ: ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಶನಿವಾರ ಮುಂಡರಗಿ ತಾಲೂಕು ಕೃಷಿ ಪರಿಕರ ಮಾರಾಟಗಾರರಿಗೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಕೆ ಕಿಸಾನ್ ತಂತ್ರಾಂಶದಲ್ಲಿ ಯೂರಿಯಾ ಗೊಬ್ಬರ ವಿತರಣೆ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೃಷಿ ಇಲಾಖೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಮಾರಾಟ ಮಾಡಲು ಸೂಚಿಸಿದರು. ಕೃಷಿ ಪರಿಕರಗಳನ್ನು ನಿಗದಿತ ಬೆಲೆಗೆ ಮಾರಾಟ ಮಾಡುವುದು, ರಶೀದಿ ನೀಡುವುದು, ಕೃತಕ ಅಭಾವ ಸೃಷ್ಟಿಸದೇ, ರೈತ ಸ್ನೇಹಿ ವ್ಯವಹಾರಗಳನ್ನು ಕೈಗೊಳ್ಳಲು ಕಟ್ಟುನಿಟ್ಟಾಗಿ ಸೂಚಿಸಿದರು. ಯಾವುದೇ ವ್ಯಾಪಾರಸ್ಥರು ನಿಗದಿಗಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ಮುಂಡರಗಿ, ತಾಲೂಕು ಕೃಷಿ ಪರಿಕರ ಮಾರಾಟಗಾರರಿಗೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಕೆ ಕಿಸಾನ್ ತಂತ್ರಾಂಶದಲ್ಲಿ ಯೂರಿಯಾ ಗೊಬ್ಬರ ವಿತರಣೆ ಕುರಿತು ಆನ್‌ಲೈನ್‌ನಲ್ಲಿ ತರಬೇತಿ ನೀಡಿದರು. ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಎಫ್‌ಐಡಿ ಹೊಂದಿರಬೇಕು. ಈ ಕುರಿತು ರಾಜ್ಯ ಸರ್ಕಾರ ಕೃಷಿ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಆಧಾರದ ಮೇಲೆ ಕೆ ಕಿಸಾನ್ ತಂತ್ರಜ್ಞಾನ ಹಾಗೂ ಪಿಒಎಸ್ ಮಷಿನ್‌ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುವುದು ಎಂದು ವಿವರಿಸಿದರು.

ಯೂರಿಯಾ ಗೊಬ್ಬರದ ಬದಲಾಗಿ ನ್ಯಾನೋ ಯೂರಿಯಾ ಹಾಗೂ ಕಾಂಪ್ಲೆಕ್ಸ್‌ ಗೊಬ್ಬರಗಳ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಲು ಸೂಚಿಸಿ, ರೈತರಿಗೆ ಕೇವಲ ಗೊಬ್ಬರವಷ್ಟೆ ಅಲ್ಲದೆ, ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲು ಆದ್ಯತೆ ನೀಡಬೇಕು ಎಂದರು.

ತಾಲೂಕಿನ ಎಲ್ಲ ಖಾಸಗಿ ಕೃಷಿ ಪರಿಕರ ಮಾರಾಟಗಾರರು ಮತ್ತು ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು, ಕೃಷಿ ಅಧಿಕಾರಿಗಳು, ಆತ್ಮಾ ಸಿಬ್ಬಂದಿ ಉಪಸ್ಥಿತರಿದ್ದರು.