ಸಾರಾಂಶ
ಕನ್ನಡಪ್ರಭ ವಾರ್ತೆ ಭಾರತೀನಗರ
ಹೆಣ್ಣು ಭ್ರೂಣ ಹತ್ಯೆಯಿಂದ ಹೆಣ್ಣಿನ ಸಂತತಿ ಕಡಿಮೆಯಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.ದೊಡ್ಡರಸಿನಕೆರೆ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸಹಯೋಗದಲ್ಲಿ ನಡೆದ ಹೆಣ್ಣು ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ವಿರೋಧಿಸಿ ಹಾಗೂ ಬಾಲ್ಯವಿವಾಹ ನಿಷೇಧದದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣುಭ್ರೂಣಹತ್ಯೆ ಮತ್ತು ಬಾಲ್ಯ ವಿವಾಹ ಪ್ರಕರಣಗಳು ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ನಮ್ಮೊಂದಿಗೆ ಕೈಜೋಡಿಸಬೇಕು ಎಂದರು.ಎಸ್ಪಿ ಡಾ.ಯತೀಶ್ ಮಾತನಾಡಿ, ಪ್ರಸ್ತುತ ದಿನದಲ್ಲಿ ಕುಟುಂಬಗಳಲ್ಲಿ ಜಮೀನಿನು ವಿಚಾರದಲ್ಲಿ ಕಿತ್ತಾಟಗಳು ಹೆಚ್ಚಾಗುತ್ತಿವೆ. ಜೊತೆಗೆ ತಂದೆ-ತಾಯಿಗಳಿಗೆ ಊಟ ನೀಡದೆ ಅನಾಥಶ್ರಮಕ್ಕೆ ಸೇರಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಹೆಣ್ಣುಮಕ್ಕಳು ತಂದೆ-ತಾಯಿಗಳನ್ನು ಅಪಾರವಾಗಿ ಗೌರವಿಸಿ, ಪ್ರೀತಿಸುತ್ತಾರೆ. ಇದನ್ನು ಅರಿತು ಹೆಣ್ಣುಭ್ರೂಣ ಹತ್ಯೆಯನ್ನು ಪೋಷಕರು ತಡೆಗಟ್ಟುವಲ್ಲಿ ಪೋಷಕರು ಮುಂದಾಗಬೇಕೆಂದು ಮನವಿ ಮಾಡಿದರು.
ಜಿಪಂ ಸಿಇಒ ಶೇಖ್ ತನ್ವಿರ್ ಆಸೀಫ್ ಮಾತನಾಡಿ, ಹೆಣ್ಣುಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಹಳ್ಳಿಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಪ್ರತೀ ಗ್ರಾಪಂ ಮಟ್ಟದಲ್ಲೂ ಇಂತಹ ಕಾರ್ಯಕ್ರಮ ಹಮ್ಮಿಕೊಂಡರೆ ಹೆಣ್ಣುಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು ಎಂದರು.ಈ ವೇಳೆ ಹೆಣ್ಣುಭ್ರೂಣಹತ್ಯೆ ಕುರಿತು ಅರುಣೋದಯ ಕಲಾ ತಂಡದವರಿಂದ ಬೀದಿ ನಾಟಕ ನಡೆಯಿತು. ಗ್ರಾಪಂ ಅಧ್ಯಕ್ಷ ಮಂಚೇಗೌಡ, ಜನವಾದಿ ಮಹಿಳಾಸಂಘಟನೆ ರಾಜ್ಯ ಕಾರ್ಯದರ್ಶಿ ದೇವಿ, ಜಿಲ್ಲಾಧ್ಯಕ್ಷೆ ಡಿ.ಕೆ.ಲತಾ, ಜಿಲ್ಲಾ ಕಾರ್ಯದರ್ಶಿ ಸುಶೀಲ, ಜಿಲ್ಲಾ ಉಪಾಧ್ಯಕ್ಷೆ ಶೋಭಾ, ಜಿಲ್ಲಾ ಸಹಕಾಯದರ್ಶಿ ಮಂಜುಳ, ಪ್ರೇಮಮ್ಮ, ಗ್ರಾ.ಪಂ ಪಿಡಿಒ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.