ಚೆಯ್ಯಂಡಾಣೆಯಲ್ಲಿ ಅರೆಭಾಷೆ ಗಡಿನಾಡ ಉತ್ಸವ: ಭರದ ಸಿದ್ಧತೆ

| Published : Nov 10 2024, 01:50 AM IST

ಚೆಯ್ಯಂಡಾಣೆಯಲ್ಲಿ ಅರೆಭಾಷೆ ಗಡಿನಾಡ ಉತ್ಸವ: ಭರದ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ಅರೆಭಾಷೆ ಗಡಿನಾಡ ಉತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ. ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಶಾಮಿಯಾನ, ಆಟೋಟಕ್ಕೆ ವಿವಿಧ ಸಿದ್ಧತೆಗಳು ಕೈಗೊಳ್ಳಲಾಗಿದೆ.

ದುಗ್ಗಳ ಸದಾನಂದ

ಕನ್ನಡಪ್ರಭ ವಾರ್ತೆ ನಾಪೋಕ್ಲು

ಅರೆ ಭಾಷೆ ಗಡಿನಾಡ ಉತ್ಸವಕ್ಕೆ ಸಮೀಪದ ಚೆಯಂಡಾಣೆ ಯಲ್ಲಿ ಭರದ ಸಿದ್ಧತೆಗಳಾಗುತ್ತಿವೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಭಾನುವಾರ ಬೆಳಗ್ಗೆ 8.30 ಗಂಟೆಗೆ ಮಡಿಕೇರಿ ತಾಲೂಕು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ , ಶಾಮಿಯಾನ, ಆಟೋಟಕ್ಕೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಶನಿವಾರ ಕೈಗೊಳ್ಳಲಾಯಿತು.

ನರಿಯಂಡಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬಿಳಿಯಂಡ್ರ ಹರಿಪ್ರಸಾದ್ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳಲಿದ್ದಾರೆ. ಪೂರ್ವ ತಯಾರಿ ನಡೆಯುತ್ತಿದೆ. ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಶಾಮಿಯಾನ , ಆಸನಗಳ ಅವಸ್ಥೆ ಹಾಗೂ ಕ್ರೀಡಾ ಕೂಟಕ್ಕೆ ಸಂಬಂಧಿಸಿದ ಎಲ್ಲಾ ಸ್ಪರ್ಧೆಗಳಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಂಘದ ಸದಸ್ಯರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.

ಹಿರಿಯ ಸದಸ್ಯ ಪೊಕ್ಕೊಳಂಡ್ರ ಧನೋಜ್ ಮಾತನಾಡಿ ಸರ್ಕಾರಿ ಶಾಲಾ ಮೈದಾನದಲ್ಲಿ ಅಯ್ಯಪ್ಪ ಯುವಕ ಸಂಘ ಹಾಗೂ ಅರೆ ಭಾಷೆ ಅಕಾಡೆಮಿಯಿಂದ ಸಂಯುಕ್ತ ಆಶ್ರಯದಲ್ಲಿ ಗಡಿನಾಡ ಉತ್ಸವ ಚೆಯ್ಯಂಡಾಣೆ (ನಮ್ಮಲ್ಲಿ) ಆಯೋಜನೆ ಮಾಡಿರುವುದು ತುಂಬಾ ಸಂತೋಷದ ವಿಷಯವಾಗಿದ್ದು ಈ ಸಂದರ್ಭ ನಮ್ಮ ಜನಾಂಗಬಾಂಧವರಿಗೆ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನಾಂಗಬಾಂಧವರು ಭಾಗವಹಿಸುವಂತೆ ಮನವಿ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ವಿಧಾನಸಭೆ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಕೊಟ್ಟಕೇರಿಯನ ದಯಾನಂದ, ಪಾರಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ತೋಟಂಬೈಲು ಮನೋಹರ್, ಚೆಯ್ಯಂಡಾಣೆ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ. ಮಾಜಿ ಸದಸ್ಯರಾದ ಗೌಡುಧಾರೆ ಚೋಟು ಬಿದ್ದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.