ಕನ್ನಡಪ್ರಭ ವಾರ್ತೆ ನಾಗಮಂಗಲ

ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ, ಈ ದೇಶವನ್ನು ಮುನ್ನಡೆಸಬಲ್ಲ ಯುವಶಕ್ತಿಯನ್ನು ಸರಿದಾರಿಯಲ್ಲಿ ಕರೆದೊಯ್ಯುವ ಆದರ್ಶ ಪುರುಷರು, ಮಾದರಿಗಳು ಕಡಿಮೆಯಾಗುತ್ತಿವೆ ಎಂದು ಸಾಹಿತಿ ಹಾಗೂ ತಾಲೂಕಿನ ಹಟ್ಣ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ತಿಮ್ಮರಾಯಿಗೌಡ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಇಂದಿಗೂ ಸಹ ದೇಶದ ಯುವಕರ ಶಕ್ತಿ ಕುಂದಿಲ್ಲ. ಅವರ ಉತ್ಸಾಹ ಕಡಿಮೆಯಾಗಿಲ್ಲ. ಆದರೆ, ನಮಗೆ ಆದರ್ಶ ಪುರುಷರ ಕೊರತೆ ಎದ್ದುಕಾಣುತ್ತಿದೆ. ಯುವ ಜನತೆಗೆ ಯೋಗ್ಯ ಶಿಕ್ಷಣ ಯಾವುದೆಂಬುದನ್ನು ಇಂದಿಗೂ ಕೂಡ ಸರಿಯಾದ ರೀತಿಯಲ್ಲಿ ನಿರ್ಧಾರ ಮಾಡಿಲ್ಲವೆನ್ನಿಸುತ್ತಿದೆ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಲೆಫ್ಟಿನೆಂಟ್ ಜನರಲ್ ಡಾ.ಅಶೋಕ್ ಮಾತನಾಡಿ, ಇಡೀ ವಿಶ್ವಕ್ಕೆ ಸಂಸೃತಿಯ ಪ್ರತಿರೂಪದಂತಿರುವ ಅನುಕರಣೆಯ ಸಾಂಸ್ಕೃತಿಕ ಪರಂಪರೆ ಹಾಗೂ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಏಕೈಕ ದೇಶವೆಂದರೆ ಅದು ಭಾರತ ಮಾತ್ರ ಎಂದರು.

ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಏಳು ಮಂದಿ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಧ್ವಜಾರೋಹಣದ ನಂತರ ತಾಲೂಕಿನ ಕದಬಹಳ್ಳಿಯ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆ ಎನ್‌ಸಿಸಿ ವಿದ್ಯಾರ್ಥಿನಿಯರು ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳ ತಂಡ ಶಿಸ್ತಿನ ಪಥಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣದ ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಾಗಮಂಗಲ ಪುರಸಭೆ ಸಿಬ್ಬಂದಿ ಪ್ರಸ್ತುತ ಪಡಿಸಿದ ಸ್ವಚ್ಛ ಭಾರತ ಅಭಿಯಾನ ಕುರಿತಾದ ರೂಪಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಇದಕ್ಕೂ ಮುನ್ನ ಪಟ್ಟಣದ ತಾಲೂಕು ಆಡಳಿತ ಸೌಧದಿಂದ ತಾಲೂಕು ಕ್ರೀಡಾಂಗಣದವರೆಗೆ ಶಾಲಾ ಮಕ್ಕಳೊಂದಿಗೆ ಭಾರತಾಂಬೆಯ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ತಾಪಂ ಇಒ ಬಿ.ಎಸ್.ಸತೀಶ್, ಬಿಇಒ ಎಸ್.ಆರ್.ಲೋಕೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಪುರಸಭೆ ಮಖ್ಯಾಧಿಕಾರಿ ವೀಣಾ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಸಿಡಿಪಿಒ ಕೃಷ್ಣಮೂರ್ತಿ, ಸಿಪಿಐ ಹೇಮಂತ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಇದ್ದರು.