ಕನ್ನಡಪ್ರಭ ವಾರ್ತೆ ಮದ್ದೂರು

ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ‌ಈ ಹಿಂದೆ ನಡೆದ ನೀರಾವರಿ ಯೋಜನೆಯ ಅದ್ವಾನಗಳಿಂದಾಗಿ‌ ರೈತರು ಕಷ್ಟ ಅನುಭವಿಸುವಂತಾಗಿದೆ ಎಂದು ಶಾಸಕ ಕೆ.ಎಂ.ಉದಯ್ ದೂರಿದರು.

ಕ್ಷೇತ್ರ ವ್ಯಾಪ್ತಿಯ ಆತಗೂರು ಹೋಬಳಿಯ ಮಾಚಹಳ್ಳಿ ಬಳಿ ಲೋಕೋಪಯೋಗಿ ಇಲಾಖೆ ವತಿಯಿಂದ 2 ಕೋಟಿ ರು. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕಾವೇರಿ ನೀರಾವರಿ ನಿಗಮ ಕಾಲುವೆ, ಪೈಪ್ ಲೈನ್ ಹಾಗೂ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ ರೈತರಿಗೆ ನಿರಂತರವಾಗಿ ನೀರು ಪೂರೈಕೆ ಆಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಮಳೆಗಾಲದಲ್ಲಿ ಲಭ್ಯವಾಗುವ ನೀರನ್ನು ವೈಜ್ಞಾನಿಕವಾಗಿ ಸಂಗ್ರಹಣೆ ಮಾಡಿ ಕೆರೆ, ಕಟ್ಟೆಗಳು ಇತರ ಜಲಮೂಲಗಳನ್ನು ತುಂಬಿಸುವ ಯೋಜನೆ ರೂಪಿಸಬೇಕುಯ ನೀರಾವರಿ ಯೋಜನೆಗಳ ವಿಷಯದಲ್ಲಿ ತಾವು ಈಗಾಗಲೇ ಅಧಿಕಾರಿಗಳ ಜೊತೆ ಹಲವು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ. ಅಗತ್ಯ ದುರಸ್ತಿ ಕಾಮಗಾರಿ ಹಾಗೂ ತಾಂತ್ರಿಕ ಕ್ರಮಗಳನ್ನು ತೊರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.


ಮುಂದಿನ ದಿನಗಳಲ್ಲಿ ಏತ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿಗೆ ಯಾವುದೇ ತೊಂದರೆಯಾಗದಂತೆ ಶಾಶ್ವತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಸಿ.ನಾಗೇಗೌಡ ಗ್ರಾಪಂ ಮಾಜಿ ಅಧ್ಯಕ್ಷ ಮಣಿಕಂಠ, ಮುಖಂಡರಾದ ಕೆ.ದಾಸೇಗೌಡ, ಸಿಪಾಯಿ ಶ್ರೀನಿವಾಸ್, ಮತ್ತಿತರರು ಇದ್ದರು.

ನೀಟ್ ಪರೀಕ್ಷೆ ಮಕ್ಕಳ ಭವಿಷ್ಯದೊಂದಿಗೆ ಕೇಂದ್ರ ಚೆಲ್ಲಾಟ: ಕೆ.ಎಂ.ಉದಯ್

ಮದ್ದೂರು:

ನೀಟ್ ಪರೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಕ್ಕಳ ಭವಿಷ್ಯ ದೊಂದಿಗೆ ಚೆಲ್ಲಾಟವಾಡುತ್ತಿದೆ. ಪರೀಕ್ಷೆ ಅಕ್ರಮ ಸಂಬಂಧಪಟ್ಟತೆ ಕೇಂದ್ರ ಶಿಕ್ಷಣ ಸಚಿವರು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಶಾಸಕ ಕೆ.ಎಂ.ಉದಯ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಜೊತೆಗೆ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ಮೇಲು ಕ್ರಮ ಜರುಗಿಸಬೇಕು. ಮಕ್ಕಳ ಭವಿಷ್ಯ ವಿದ್ಯಾಭ್ಯಾಸದಲ್ಲಿದೆ. ತಮಗೆ ಆದ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳಲು ಹೋಗಿದ್ದಾರೆ. ಆದರೆ, ಕೇಂದ್ರ ಸರ್ಕಾರ ಸಮಸ್ಯೆಯನ್ನು ಆಲಿಸದೆ ಪೊಲೀಸರ ಬಲಪ್ರಯೋಗ ಮಾಡಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಫಲವನ್ನು ಕೇಂದ್ರದ ನಾಯಕರು ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದರು.