ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಪ್ರತಿಭಟನೆ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ)ಯಿಂದ ರಸ್ತೆ ತಡೆ------------

ಮುಖ್ಯಾಂಶ

1) ಕುಡಿಯಲು ಬಳಸುವುದಕ್ಕೆ ಶೇಖರಣೆ ಮಾಡಿರುವ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶಿಸಿರುವುದು ಸರಿಯಲ

2) ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆಗಮಿಸಿ ಸ್ಥಿತಿಗತಿ ಪರಿಶೀಲಿಸಿ ಬಳಿಕ ಆದೇಶ ನೀಡಬೇಕು ಎಂದು ಆಗ್ರಹ


-----------

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ ಪ್ರತಿ ನಿತ್ಯ ೩,೫೦೦ ಕ್ಯೂಸೆಕ್‌ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದು, ಕರುನಾಡಲ್ಲಿ ಬರದ ಭೀತಿ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲೂ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಆದೇಶಿಸಿರುವುದು ಖಂಡನೀಯ. ರಾಜ್ಯ ಸರ್ಕಾರ ಒಂದು ತೊಟ್ಟು ನೀರನ್ನು ಬಿಡಬಾರದು. ಬಿಟ್ಟರೆ ರೈತ ಸಂಘಟನೆಗಳಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ನೀರಿನ ಕೊರತೆ ಉಂಟಾಗಿರುವ ಸಂದರ್ಭದಲ್ಲಿ ಕುಡಿಯಲು ಶೇಖರಣೆ ಮಾಡಿರುವ ನೀರನ್ನು ತಮಿಳುನಾಡಿಗೆ ೩೫೦೦ ಕ್ಯೂಸೆಕ್‌ನಂತೆ ೧೫ ದಿನಗಳಲ್ಲಿ ಒಟ್ಟು ೪ ಟಿಎಂಸಿ ನೀರ ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿರುವುದು ಸರಿಯಲ್ಲ. ನಮ್ಮ ರೈತರು ಹಾಗೂ ಜನ ಜಾನುವಾರುಗಳ ಗತಿಯೇನು ಎಂದರು.

ಶೇಖರಿಸಿರುವ ಎಲ್ಲ ನೀರನ್ನು ಅವರಿಗೆ ಕೊಟ್ಟರೆ ನಮ್ಮ ಕರ್ನಾಟಕದ ಜನತೆ ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆಗಮಿಸಿ ಇಲ್ಲಿನ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿ ಬಳಿಕ ಆದೇಶ ನೀಡಬೇಕು ಎಂದು ಆಗ್ರಹಿಸಿದರು.ಇದು ಎರಡು ರಾಜ್ಯಗಳ ರೈತರನ್ನು ಎತ್ತಿಕಟ್ಟಿ ಪರಸ್ಪರ ಬಡಿದಾಡಿಕೊಳ್ಳುವ ಆದೇಶ ಇದು. ನೀರು ಬಿಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಈಗ ಇರುವ ನೀರು ರಾಜ್ಯಕ್ಕೆ ಸಾಕಾಗುವುದಿಲ್ಲ. ಆದೇಶ ಕೊಡುವುದಕ್ಕೂ ಮುಂಚೆ ಇಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ನಮ್ಮ ಸಂಸದರು, ವಕೀಲರು ವಿಫಲವಾಗಿರುವುದೇ ಇಷ್ಡಕ್ಕೆಲ್ಲಾ ಕಾರಣ ಎಂದು ಹೇಳಿದರು.ನಂತರ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷೀಯ ಮಂಡಳಿ ಸದಸ್ಯರಾದ ನಟರಾಜು ಬಂದಿಗೌಡನಹಳ್ಳಿ, ಅಂಬಳೆ ಶಿವಕುಮಾರ್, ಚಂಗಡಿ ಕರಿಯಪ್ಪ, ಪಾಪಣ್ಣ, ಮುಖಂಡರಾದ ಮಂಜು ಮಹೇಶ್, ರಾಜು, ಶಶಿಕುಮಾರ್, ಗಣೇಶ್, ಮಹೇಶ್, ಉಗನೇದಹುಂಡಿ ಶೇಖರಪ್ಪ. ಸೇರಿದಂತೆ ಇತರರು ಭಾಗವಹಿಸಿದ್ದರು.----------

೨೯ಸಿಎಚ್‌ಎನ್೨

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.