ಸಾರ್ವಜನಿಕ ಶಿಕ್ಷಣವನ್ನು ಉಳಿಸಬೇಕು ಹಾಗೂ "ಕೆಪಿಎಸ್ ಮ್ಯಾಗ್ನೆಟ್ " ಯೋಜನೆಯ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮವನ್ನು ಖಂಡಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಸಜ್ಜಾಗಬೇಕು ಎಂದು ನಗರದ ಹೇಮಾವತಿ ಪ್ರತಿಮೆ ಮುಂಭಾಗ ಭಾನುವಾರ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ತನ್ನ 72ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಕರೆ ನೀಡಿತು.
ಕನ್ನಡಪ್ರಭ ವಾರ್ತೆ ಹಾಸನ
ಸಾರ್ವಜನಿಕ ಶಿಕ್ಷಣವನ್ನು ಉಳಿಸಬೇಕು ಹಾಗೂ "ಕೆಪಿಎಸ್ ಮ್ಯಾಗ್ನೆಟ್ " ಯೋಜನೆಯ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮವನ್ನು ಖಂಡಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಸಜ್ಜಾಗಬೇಕು ಎಂದು ನಗರದ ಹೇಮಾವತಿ ಪ್ರತಿಮೆ ಮುಂಭಾಗ ಭಾನುವಾರ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ತನ್ನ 72ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಕರೆ ನೀಡಿತು.ಈ ಸಂದರ್ಭದಲ್ಲಿ ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ಕಳೆದ ೭೧ ವರ್ಷಗಳಿಂದ ಎಐಡಿಎಸ್ಒ ದೇಶಾದ್ಯಂತ ವಿದ್ಯಾರ್ಥಿ ಚಳವಳಿಗಳನ್ನು ಕಟ್ಟಿಕೊಂಡು, ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು ಎಂಬ ಧ್ಯೇಯದೊಂದಿಗೆ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿದೆ ಎಂದು ಹೇಳಿದರು. ಈಶ್ವರಚಂದ್ರ ವಿದ್ಯಾಸಾಗರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಭಗತ್ ಸಿಂಗ್, ನೇತಾಜಿ ಮೊದಲಾದ ಮಹಾನ್ ಚೇತನಗಳ ಆಶಯವಾದ ಸಾರ್ವಜನಿಕ ಶಿಕ್ಷಣವನ್ನು ಗಾಳಿಗೆ ತೂರಿ, ಇಂದು ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ಶಿಕ್ಷಣವನ್ನು ವ್ಯಾಪಾರ ವಸ್ತುವಾಗಿಸುತ್ತಿದೆ ಎಂದು ಆರೋಪಿಸಿದರು.೪೦,೦೦೦ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ದುಡಿಯುವ ವರ್ಗದ ಮಕ್ಕಳಿಗೆ ಜ್ಞಾನದ ಬಾಗಿಲು ಮುಚ್ಚಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆಯನ್ನು ಉಲ್ಲೇಖಿಸಿದ ಅವರು, ಅನ್ಯಜಾತಿ ವಿವಾಹದ ಕಾರಣಕ್ಕೆ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಸಮಾಜದಲ್ಲಿ ಜಾತಿ ಮನಸ್ಥಿತಿ ಎಷ್ಟರ ಮಟ್ಟಿಗೆ ಬೇರೂರಿದೆ ಎಂಬುದಕ್ಕೆ ಕನ್ನಡಿ ಹಿಡಿದಂತಾಗಿದೆ. ಇಂತಹ ಅಮಾನವೀಯ ಕೃತ್ಯಗಳು ಕೊನೆಯಾಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಕುಲದೀಪ್ ಸಿಂಗ್ನ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟ ದೆಹಲಿ ಹೈಕೋರ್ಟ್ ತೀರ್ಪು ಕಾನೂನಿನ ಆಳ್ವಿಕೆ ಮತ್ತು ಮಹಿಳಾ ಸುರಕ್ಷತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದರು. ರಾಜಕೀಯ ಮತ್ತು ಹಣದ ಬಲ ಅತ್ಯಂತ ಘೋರ ಅಪರಾಧಗಳನ್ನೂ ಮೀರಿಸಬಲ್ಲದು ಎಂಬ ಸಂದೇಶ ಸಮಾಜಕ್ಕೆ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ, ಮಾನವೀಯತೆಯನ್ನು ಉಳಿಸಲು ರಾಷ್ಟ್ರವ್ಯಾಪಿ ಚಳವಳಿಯನ್ನು ರೂಪಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು. ಅರಾವಳಿ ಪರ್ವತ ಶ್ರೇಣಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿದ ಅವರು, ೧೦೦ ಮೀಟರ್ಗಿಂತ ಕಡಿಮೆ ಎತ್ತರದ ಪರ್ವತಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿರುವುದು ಪರಿಸರ ಮತ್ತು ಲಕ್ಷಾಂತರ ಜನರ ಜೀವನಕ್ಕೆ ಅಪಾಯ ತಂದೊಡ್ಡುತ್ತದೆ ಎಂದು ಹೇಳಿದರು. ಕಾರ್ಪೊರೇಟ್ ಲಾಭಕ್ಕಾಗಿ ಜನಸಾಮಾನ್ಯರ ಹಿತಾಸಕ್ತಿಯನ್ನು ತ್ಯಜಿಸುವ ನೀತಿಗಳು ಖಂಡನೀಯವೆಂದರು.ಕಾರ್ಯಕ್ರಮದ ಕೊನೆಯಲ್ಲಿ ಭಗತ್ ಸಿಂಗ್, ನೇತಾಜಿ, ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ ಮೊದಲಾದ ಮಹಾನ್ ವ್ಯಕ್ತಿಗಳ ಆಶಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ಒಂದಾಗಿ ಹೋರಾಟ ನಡೆಸಬೇಕು ಎಂದು ಎಐಡಿಎಸ್ಒ ೭೨ನೇ ಸಂಸ್ಥಾಪನಾ ದಿನದ ಸಂದೇಶ ನೀಡಲಾಯಿತು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ಚೈತ್ರ, ಕಾರ್ಯದರ್ಶಿ ಸುಷ್ಮಾ, ಕಾರ್ಯಕರ್ತರಾದ ಚಂದ್ರಶೇಖರ್, ಧನಂಜಯ್ ರಾಕೇಶ್, ಶಿವಲಿಂಗ, ನಗೀನ ಬಾನು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
=========ಫೋಟೋ:
ಎಐಡಿಎಸ್ಒ 72ನೇ ಸಂಸ್ಥಾಪನಾ ದಿನದಂದು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಸರ್ಕಾರಿ ಶಾಲೆಗ ಮುಚ್ಚು ನೀತಿಗಳ ವಿರುದ್ಧ ಘೋಷಣೆ ಕೂಗಲಾಯಿತು.