ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಗ್ರಾಮಸ್ಥರು ತಮ್ಮ ಹಕ್ಕುಗಳಿಗಾಗಿ ಅರ್ಥಪೂರ್ಣ ಹೋರಾಟವನ್ನು ನಡೆಸಬೇಕು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಉಣಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮದ ಜನರು ತಮ್ಮ ಅವಶ್ಯಕತೆಗಳಿಗಾಗಿ ಪ್ರತಿಭಟನೆ, ಹೋರಾಟ ನಡೆಸುವುದು ಸಾಮಾನ್ಯ. ಗ್ರಾಮದ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದರೆ ಸೂಕ್ತವಾಗಿ ಪರಿಹರಿಸಲಾಗುವುದು. ಅದು ಬಿಟ್ಟು ಸ್ಥಳೀಯ ನಿವಾಸಿಗಳು ಚುನಾವಣೆ ಬಹಿಷ್ಕಾರದಂತಹ ಕಾರ್ಯಕ್ಕೆ ಮುಂದಾಗಬಾರದು ಎಂದರು. ಗ್ರಾಮ ಮಟ್ಟದ ಸಮಸ್ಯೆಗಳನ್ನು ಅಧಿಕಾರಿಗಳು ಪರಿಹರಿಸುತ್ತಾರೆ. ಅಧಿಕಾರಿಗಳಿಗೆ ಇಚ್ಛಾ ಶಕ್ತಿ ಇದ್ದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ದಾರಿ ಇರುತ್ತದೆ. ಅಧಿಕಾರಿ ವರ್ಗದವರು ಕಾಳಜಿಯಿಂದ ಇಚ್ಛಾಶಕ್ತಿಯಿಂದ ಜನರ ಕೆಲಸವನ್ನು ನಿರ್ವಹಿಸಿದರೆ ಸ್ಥಳೀಯ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳ ಬಗ್ಗೆ ಉತ್ತಮ ಅಭಿಪ್ರಾಯ ಮೂಡುತ್ತದೆ ಎಂದರು. ನಿವೇಶನ ರಹಿತರಿಗೆ ಕಂದಾಯ ಇಲಾಖೆಯ ಮೂಲಕ ಸೂಕ್ತ ಪರಿಹಾರವನ್ನು ಒದಗಿಸಲಾಗುವುದು ಎಂದ ಅವರು ಯಾವುದೇ ಕಾರಣಕ್ಕೂ ಯಾರಿಗೂ ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳಬೇಡಿ. ಯಾರಾದರೂ ಲಂಚದ ಬೇಡಿಕೆ ಇಟ್ಟರೆ ನನ್ನ ಗಮನಕ್ಕೆ ತನ್ನಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಕಾಮಗಾರಿಗಳಿಗೆ ವಿಶೇಷ ಅನುದಾನ: ಪಂಚಾಯಿತಿ ಅಧ್ಯಕ್ಷರಾದ ಎಚ್ಎ ಹಂಸ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಶಾಸಕರು ಸಾಕಷ್ಟು ವಿಶೇಷ ಅನುದಾನ ನೀಡಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಿದ್ದಾರೆ ಎಂದರು.
ಅರಣ್ಯ ಇಲಾಖೆ ಅಧಿಕಾರಿಯವರು ಗ್ರಾಮ ಸಭೆಗೆ ಗೈರು ಹಾಜರಾದ ಕಾರಣ ಅವರಿಗೆ ನೋಟೀಸು ನೀಡುವಂತೆ ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಧಿಕಾರಿ ಮಾತನಾಡಿ ಅಂಗನವಾಡಿ ಮಕ್ಕಳ ಸಂಖ್ಯೆ ಕೊರತೆ ಹಾಗೂ ಪಾಲೆಮಾಡು ಅಂಗನವಾಡಿ ಕಾರ್ಯಕರ್ತೆ ನಿರಂತರ ಗೈರು ಹಾಜರಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರಿಗೆ, ಸ್ಥಳೀಯರ ವಿಶ್ವಾಸದಿಂದ ಸರಿಯಾಗಿ ಕರ್ತವ್ಯ ನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆಗೆ ನಿರ್ದೇಶನ ನೀಡಲು ಸಿಡಿಪಿಒ ಅವರಿಗೆ ತಿಳಿಸಿದರು. ಪುನರ್ವಸತಿ ಯೋಜನೆಯಡಿ ಫಲಾನುಭವಿ ಸಾವಿತ್ರಿ ಹಾಗೂ ಬಿ ಡಿ ರತಿ ಅವರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅನುದಾನ ಬಿಡುಗಡೆಯಾಗದೇ ಇರುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಶಾಸಕರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯವರಿಗೆ ಸೂಚನೆ ನೀಡಿದರು. ಗ್ರಾಮಸ್ಥರಾದ ಅಶ್ವಿನಿ ವಿದ್ಯುತ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದಾಗ ಸೆಸ್ಕ್ ಮೂರ್ನಾಡು ಕಿರಿಯ ಅಭಿಯಂತರರು ಪ್ರತಿಕ್ರಿಯಿಸಿ ವಿದ್ಯುತ್ ಕಡಿತಗೊಳಿಸದಂತೆ ಕ್ರಮವಹಿಸುವಂತೆ ತಿಳಿಸಿದರು.ಹಕ್ಕುಪತ್ರ ವಿತರಣೆ:
ಕಂದಾಯ ಇಲಾಖೆಯ ಮೂಲಕ ಶಾಸಕರು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು. ನಿವೇಶನ ಯೋಜನೆಯಡಿ ಹಕ್ಕುಪತ್ರ ನೀಡಲು 61 ಫಲಾನುಭವಿಗಳು, ವಸತಿ ಯೋಜನೆಯಡಿ 128, ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ 35 ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಮಹಾತ್ಮಾ ಗಾಂಧಿ ನರೇಗಾ ಕ್ರಿಯಾಯೋಜನೆಯನ್ನು ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು. ಈ ಸಂದರ್ಭ ಶಾಸಕ ಡಾ. ಮಂತರ್ ಗೌಡ ಹಾಗೂ ಅಧ್ಯಕ್ಷ ಹೆಚ್ಎ ಹಂಸ, ತಹಸೀಲ್ದಾರ್ ಪ್ರವೀಣ್ ಹಾಗೂ ಇನ್ನಿತರರಿಗೆ ಸನ್ಮಾನಿಸಲಾಯಿತು.ಈ ಸಂದರ್ಭ ಗ್ರಾಮ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ ಮೊಣ್ಣಪ್ಪ ಹೊದ್ದೂರು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ ಬಿ ಹಮೀದ್ , ಗ್ರಾಮ ಪಂಚಾಯಿತಿ ಸದಸ್ಯರಾದ ಚೌರೀರ ನಾಣಯ್ಯ(ನವೀನ್), ಕುಸುಮಾವತಿ , ಲಕ್ಷ್ಮಿ, ಟೈನಿ ಕಡ್ಲೆರ, ಚೌರೀರ ಅನಿತಾ, ತಹಸೀಲ್ದಾರ್ ಪ್ರವೀಣ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ರಘು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಸಿ ಡಿ ಪಿ ಓ, ಕ್ಷೇತ್ರ ಶಿಕ್ಷಣಾಧಿಕಾರಿ, ಸೆಸ್ಕ್ ಅಭಿಯಂತರರು, ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಹಾಜರಿದ್ದರು. ಪಿಡಿಓ ಅಬ್ದುಲ್ಲ ಸ್ವಾಗತಿಸಿದರು. ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಪಾಟೀಲ್ ವಂದಿಸಿದರು.