ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮತ್ತಿತ್ತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡಿದ, ಜಾತಿ- ಧರ್ಮ, ಭಾಷೆ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಅಥವಾ ವೈಮನಸ್ಸು ಮೂಡಿಸಲು ಉತ್ತೇಜಿಸಿದ ಮತ್ತು ಶಾಂತಿ ಭಂಗಕ್ಕೆ ಪ್ರಚೋದನೆ ನೀಡಲು ಉದ್ದೇಶಪೂರ್ವಕವಾಗಿ ಅವಮಾನಿಸಿದ ಆರೋಪದ ಮೇಲೆ‌ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಯಶ್‌ಪಾಲ್‌ ಸುವರ್ಣ ಸೇರಿದಂತೆ 10 ಮಂದಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರತಿಭಟನೆ ಸ್ವಯಂಪ್ರೇರಿತವಾಗಿ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳಿಗೂ ಪ್ರತಿಕೃತಿ ದಹಿಸಿದ ಘಟನೆಗೂ ಯಾವುದೇ ನೇರ ಸಂಬಂಧವಿಲ್ಲ ಎನ್ನುವುದು‌ ಕಂಡುಬರುತ್ತಿದೆ. ಆರೋಪಿಗಳ ವಿರುದ್ಧ ಯಾವುದೇ ನೇರ ಸಾಕ್ಷ್ಯಗಳಿಲ್ಲ ತನಿಖೆಯನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದು ಪಡಿಸಿದೆ.

ಪ್ರಕರಣದ ವಿವರ: 2024ರ ಸೆಪ್ಟೆಂಬರ್‌ನಲ್ಲಿ ಕುಂದಾಪುರದ ಶಾಲೆಯ ಪ್ರಾಂಶುಪಾಲರಿಗೆ ರಾಜ್ಯ ಪ್ರಶಸ್ತಿ ತಡೆಹಿಡಿದಿದ್ದನ್ನು ವಿರೋಧಿಸಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿದ್ದರು. ‌ಈ ಸಂಬಂಧ ಎನ್‌ಎಸ್‌ಯುಐ ನಾಯಕ ಸೌರಭ್ ಬಲ್ಲಾಳ್ ಅವರು ನೀಡಿದ ದೂರಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಮತ್ತಿತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.