ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣದ ಹೆಸರಿನಲ್ಲಿ ಪೂಜೆ ಮಾಡಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ ಐಆರ್ ಹಿಂಪಡೆಯುವಂತೆ ಆಗ್ರಹಿಸಿ ಸೆ.7ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿಕೆ

ಕನ್ನಡಪ್ರಭ ವಾರ್ತೆ ಗದಗ

ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣದ ಹೆಸರಿನಲ್ಲಿ ಪೂಜೆ ಮಾಡಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ ಐಆರ್ ಹಿಂಪಡೆಯುವಂತೆ ಆಗ್ರಹಿಸಿ ಸೆ.7ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ಸಂಜೆ 4 ಕ್ಕೆ ಟಿಪ್ಪು ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ದಲಿತರು ಹಾಗೂ ದುರ್ಬಲ ವರ್ಗದವರ ಹಕ್ಕುಗಳ ಪರ ಧ್ವನಿ ಎತ್ತುವುದು ಕಾಂಗ್ರೆಸ್‌ನ ನಿರಂತರ ಧ್ಯೇಯ. ಸಾಮಾಜಿಕ ತಾರತಮ್ಯದ ವಿರುದ್ಧ ಮಾತನಾಡಿದವರ ಧ್ವನಿ ಅಡಗಿಸಲು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಂದಾಗಿವೆ ಎಂದು ಆರೋಪಿಸಿದರು.

ಸಂವಿಧಾನ ಬೋಧಿಸಿದ ಸಮಾನತೆ ಮತ್ತು ವ್ಯಕ್ತಿ ಘನತೆ ಎತ್ತಿಹಿಡಿಯುವುದು ನಮ್ಮ ಕರ್ತವ್ಯ. ಅನ್ಯಾಯದ ವಿರುದ್ಧ ಹೋರಾಡುವವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಮೇಲಿನ ಎಫ್‌ಐಆರ್ ಅನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕೃಷ್ಣಗೌಡ ಪಾಟೀಲ ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತು ದಶಕಗಳೇ ಕಳೆದರೂ ಸಂವಿಧಾನದ ಆಶಯಗಳ ರಕ್ಷಣೆಗಾಗಿ ಬೀದಿಗಿಳಿಯಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದ ಅವರು, ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಶಕುಂತಲಾ ಅಕ್ಕಿ ಹಾಗೂ ಬಸವರಾಜ ಕಡೆಮನಿ ಸೇರಿದಂತೆ ಜಿಲ್ಲಾ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.