ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.

ಇನ್ನೂ ಬೇಸಿಗೆ ಕಾಲ ಆರಂಭವಾಗಿಲ್ಲ. ಈಗಾಗಲೇ ಬಹುತೇಕ ಕಡೆ ಗಿಡಗಂಟಿಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗುತ್ತಿವೆ. ಈ ನಡುವೆ ಬೆಂಕಿ ಕಾಣಿಸಿಕೊಳ್ಳುವ ಸ್ಥಳಗಳನ್ನು ನಿರ್ಲಕ್ಷ್ಯ ವಹಿಸಿದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಮಕ್ಕಳ ಉದ್ಯಾನವನದ ಹೊರಭಾಗದ ಬೇಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕದಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ವೇಳೆ ನಿರ್ಲಕ್ಷ್ಯವಹಿಸಿದ್ದಲ್ಲಿ ಬೆಂಕಿ ಇಡೀ ಉದ್ಯಾನವನ ಆವರಿಸುವ ಸಾಧ್ಯತೆಗಳು ಹೆಚ್ಚಾಗಿದ್ದು, ದುರ್ಘಟನೆ ತಪ್ಪಿದಂತಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರ್ಖಾನೆಯ ವ್ಯಾಪ್ತಿಯ ಕೆಲವು ಕಡೆ ಖಾಲಿ ಜಾಗಗಳಲ್ಲಿ ಅರಣ್ಯ ಇಲಾಖೆ ನೆಡುತೋಪುಗಳನ್ನು ನಿರ್ಮಿಸಿದ್ದು, ಬೇಸಿಗೆಯಲ್ಲಿ ಆಗಾಗ ಬೆಂಕಿ ಕಾಣಿಸಿಕೊಳ್ಳುವುದು ಕಂಡು ಬರುತ್ತದೆ. ಈ ಬೆಂಕಿ ಅವಘಡಗಳನ್ನು ನಿರ್ಲಕ್ಷ್ಯವಹಿಸಿದ್ದಲ್ಲಿ ಸುಮಾರು ೧೦-೧೫ ವರ್ಷಗಳಿಂದ ಬೆಳೆದು ನಿಂತಿರುವ ನೆಡುತೋಪುಗಳು ಸಂಪೂರ್ಣವಾಗಿ ಸುಟ್ಟು ಹೋಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ತಕ್ಷಣ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.