ಸಾರಾಂಶ
ಅಗ್ನಿಶಾಮಕ ಇಲಾಖೆಯಿಂದ ಬಿಎಂಸಿಆರ್ಸಿಯಲ್ಲಿ ಜಾಗೃತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಬಳ್ಳಾರಿಅಗ್ನಿ ಅವಘಡ ತಡೆಗಟ್ಟುವಿಕೆ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಅಣಕು ಪ್ರದರ್ಶನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬಿಮ್ಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಜವಾಬ್ದಾರಿಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ಅಣಕು ಪ್ರದರ್ಶನದಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮಾತನಾಡಿ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಬಂದಾಗ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಶುಶ್ರೂಷಕರು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಒಂದೆಡೆ ಸೇರಲು ಧ್ವನಿವರ್ಧಕ ಅಳವಡಿಸಬೇಕು ಎಂದು ಬಿಮ್ಸ್ ಆಡಳಿತಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರುವ ಸಾರ್ವಜನಿಕರಿಗೆ ಎಲ್ಲ ಮಾಹಿತಿಯನ್ನು ಒದಗಿಸುವ ಕಾರ್ಯವಾಗಬೇಕು. ಇದಕ್ಕೆ ಪರ್ಯಾಯವಾಗಿ ಧ್ವನಿವರ್ಧಕ ಬಳಸಬೇಕು. ಆಸ್ಪತ್ರೆಯಲ್ಲಿ ಯಾವುದೇ ರೀತಿಯ ತತ್ಕ್ಷಣ ಬೆಂಕಿ ಹರಡಲು ಕಾರಣವಾಗುವ ವಸ್ತುಗಳ ಮೇಲೆ ನಿಗಾ ವಹಿಸಬೇಕು. ತುರ್ತು ಸಂದರ್ಭ ಅತ್ಯಂತ ಎಚ್ಚರದಿಂದಿರಬೇಕು ಎಂದು ಹೇಳಿದರು.ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದಲ್ಲಿ ಜಾಗರೂಕರಾಗಿರಬೇಕು. ಬೆಂಕಿ ನಂದಿಸುವ ಸಾಧನಗಳನ್ನು ಸುವ್ಯವಸ್ಥೆಯಲ್ಲಿ ಇಟ್ಟುಕೊಳ್ಳಬೇಕು. ಅಗ್ನಿಶಾಮಕ ದಳದವರು 24 ಗಂಟೆಯೂ ಸೇವೆ ನೀಡುತ್ತಾರೆ. ಜನರೂ ಜಾಗ್ರತರಾಗಿರಬೇಕು ಎಂದು ಹೇಳಿದರು.
ಅಪಘಾತ ಸ್ಥಳದಲ್ಲಿ ನೀರಿನ ಸೌಕರ್ಯವಿಲ್ಲದಿದ್ದರೆ ಬೆಂಕಿಯನ್ನಾರಿಸುವುದು ಕಷ್ಟ. ಇಂಥ ಸನ್ನಿವೇಶಗಳಲ್ಲಿ ಆಧುನಿಕ ರೀತಿಯಲ್ಲಿ ತಯಾರಿಸಲಾಗಿರುವ ಬೆಂಕಿ ಆರಿಸುವ ಸಾಧನಗಳನ್ನು (ಫೈರ್ ಎಕ್ಸ್ಟಿಂಗ್ವಿಷರ್ಸ್) ಉಪಯೋಗಿಸಲಾಗುತ್ತದೆ. ಹಾಗಾಗಿ ಸಾರ್ವಜನಿಕರು ಇವುಗಳ ಸಾಮಾನ್ಯ ಮಾಹಿತಿಯೂ ಹೊಂದಬೇಕು ಎಂದು ಹೇಳಿದರು.ಇದೇ ಸಂದರ್ಭ ವಿವಿಧ ಬೆಂಕಿ ಆರಿಸುವ ಸಾಧನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯದ ಅಣಕು ಪ್ರದರ್ಶಿಸಲಾಯಿತು.
ಬಳಿಕ ಅಗ್ನಿಶಾಮಕ ಅಧಿಕಾರಿಗಳ ತಂಡ ಮತ್ತು ಬಿಮ್ಸ್ನ ವೈದ್ಯಕೀಯ ಅಧೀಕ್ಷಕರಾದ ಡಾ. ಇಂಧುಮತಿ ಅವರ ನೇತೃತ್ವದಲ್ಲಿ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿ ತಂಡ ರಚಿಸಿ, ಕುತೂಹಲಕಾರಿಯಾಗಿ ಅಣಕು ಪ್ರದರ್ಶನ ನಡೆಸಲಾಯಿತು.ಅಣಕು ಪ್ರದರ್ಶನದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಲ್ಲಿ ಬಳಸಬಹುದಾದ ಬೆಂಕಿ ನಂದಿಸುವ ಸಾಧನಗಳು, ಅಗ್ನಿ ಸಂಭವಿಸಿದ ಸ್ಥಳದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸುವುದು, ಪ್ರಥಮ ಚಿಕಿತ್ಸೆ ಹಾಗೂ ಇತರ ಕ್ರಮಗಳ ಕುರಿತು ಪರಿಪೂರ್ಣ ಮಾಹಿತಿ ನೀಡಲಾಯಿತು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣತ ಪರಮೇಶ್ ಭಾಗವಹಿಸಿದ್ದರು.