ಗಣೇಶೋತ್ಸವದ ಸಂಭ್ರಮದ ನಡುವೆಯೇ ನಗರದ ಚವ್ಹಾಟಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿಯಾಗಿದ್ದಾರೆ. ನಾಲ್ವರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಗಣೇಶೋತ್ಸವದ ಸಂಭ್ರಮದ ನಡುವೆಯೇ ನಗರದ ಚವ್ಹಾಟಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿಯಾಗಿದ್ದಾರೆ. ನಾಲ್ವರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಜಾನನ ಧಮೋನೆ ಹಾಗೂ ಅವರ ಪುತ್ರ ರೋಶನ್ ಧಮೋನೆ ಅಸುನೀಗಿದವರು. ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ ಇಬ್ಬರೂ ಮೃತಪಟ್ಟಿದ್ದಾರೆ. ಆರು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಚವ್ಹಾಟಗಲ್ಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಕುಟುಂಬದ ಬಂಧುಗಳು ಹಾಗೂ ಸ್ಥಳೀಯರ ಆಕ್ರಂದನ ಮುಗಿಲುಮುಟ್ಟಿದ್ದು, ದುರಂತದ ನೆನಪು ಸ್ಥಳೀಯರನ್ನು ಕಂಗೆಡಿಸಿದೆ.ಮೊನ್ನೆ ನಾಲ್ವರು, ನಿನ್ನೆ ಇಬ್ಬರ ಸಾವು:
ಚವ್ಹಾಟಗಲ್ಲಿಯ ನಿವಾಸಿ ಗಜಾನನ ಧಮೋನೆ ಅವರ ಮನೆಯಲ್ಲಿ ಗಣೇಶೋತ್ಸವದ ಹಬ್ಬದ ಸಂಭ್ರಮದಲ್ಲಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿತು ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಮನೆಗೆ ವ್ಯಾಪಿಸಿತ್ತು.ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಆವರಿಸಿಕೊಂಡಿದ್ದರಿಂದ ಮನೆಯೊಳಗಿದ್ದವರಿಗೆ ಹೊರಗೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಕೊಂಡಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ, ಬೆಂಕಿಯ ತೀವ್ರತೆಯಿಂದ ನಾಲ್ವರನ್ನು ರಕ್ಷಿಸಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದರು. ಭಾರತಿ ರಾಜಾರಾಮ ದಮೋನೆ (50), ಶಾರದಾ ಗಜಾನನ ದಮೋನೆ (45), ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು. ಆದರೆ, ದುರಾದೃಷ್ಟವಶಾತ್ ಇಬ್ಬರೂ ಚಿಕಿತ್ಸೆ ಫಲಿಸದೆ ಅಸುನೀಗಿದರು.ಗಣೇಶೋತ್ಸವದ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಒಂದೇ ರಾತ್ರಿ ಸಂಭವಿಸಿದ ಈ ಅಗ್ನಿ ದುರಂತ ಬರಸಿಡಿಲಿನಂತೆ ಎರಗಿದೆ. ಮೊದಲು ನಾಲ್ವರನ್ನು ಕಳೆದುಕೊಂಡು ಆಘಾತದಲ್ಲಿದ್ದ ಕುಟುಂಬಸ್ಥರಿಗೆ ಇದೀಗ ತಂದೆ-ಮಗನ ಸಾವಿನ ಸುದ್ದಿ ಮತ್ತಷ್ಟು ಆಘಾತ ತಂದಿದೆ. ಗಣೇಶೋತ್ಸವದ ಸಂಭ್ರಮದ ನಡುವೆ ನಡೆದ ಈ ದುರಂತ ಇಡೀ ಬೆಳಗಾವಿ ನಗರವನ್ನೇ ಬೆಚ್ಚಿಬೀಳಿಸಿದ್ದು, ಮನೆಗಳಲ್ಲಿನ ವಿದ್ಯುತ್ ಉಪಕರಣಗಳ ಬಳಕೆ ಹಾಗೂ ಅಗ್ನಿ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಆತಂಕ ಮೂಡಿಸಿದೆ.