ಕನ್ನಡಪ್ರಭ ವಾರ್ತೆ ಮಂಡ್ಯ
ಜನಗಣತಿ ಕಾರ್ಯವು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮ. ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ನಿರ್ದೇಶನ ನೀಡಿದರು.ಸೋಮವಾರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಜನಗಣತಿ. ಮುಂದಿನ ೧೦ ವರ್ಷಗಳ ಕಾಲ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದೆ. ಇದು ಚುನಾವಣಾ ಕೆಲಸದಷ್ಟೇ ಗಂಭೀರವಾದುದು. ಅಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು ಎಂದರು.ಈ ಬಾರಿಯ ಜನಗಣತಿ ಸ್ವಾತಂತ್ರ್ಯಾ ನಂತರ ನಡೆಯುತ್ತಿರುವ ಎಂಟನೇ ಜನಗಣತಿಯಾಗಿದ್ದು, ಡಿಜಿಟಲ್ಮೋಡ್ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಏ.೧೬ ರಿಂದ ಮೇ ೧೫ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಹಾಗೂ ಎರಡನೇ ಹಂತದ ಜನಗಣತಿ ೨೦೨೭ರ ಫೆ.೧ ರಿಂದ ಫೆ.೨೮ರವರೆಗೆ ನಡೆಯಲಿದೆ ಎಂದರು.
ಪ್ರಸ್ತುತ ನಡೆಯುವ ಗಣತಿಯು ಸಂಪೂರ್ಣ ಆನ್ಲೈನ್ ಮೋಡ್ನಲ್ಲಿರುವುದರಿಂದ ತಿದ್ದಪಡಿಗಳನ್ನು ಮಾಡಲು ಅವಕಾಶವಿಲ್ಲ. ಆದ್ದರಿಂದ ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು ಎಂದರು.
ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಶ್ರೀನಿವಾಸ್, ಧನ್ಯ, ಕುಲದೀಪ್ ಯಾದವ್ ಹಾಗೂ ರಮೇಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.