ವಿಶೇಷಚೇತನರು ಸರ್ಕಾರಿ ಯೋಜನೆಗಳ ಲಾಭ ಪಡೆದು ಸ್ವಾವಲಂಬಿಯಾಗಿ ಜೀವನ ನಿರ್ವಹಿಸಬೇಕು. ಜೀವನದಲ್ಲಿ ಆಶಾಭಾವನೆ ಹೊಂದಬೇಕು. ಸಮಸ್ಯೆಗಳಿಗೆ ಕುಗ್ಗದೇ ಅವುಗಳನ್ನು ಎದುರಿಸಿ ಮಾನಸಿಕ ಸದೃಢತೆ ಮೂಲಕ ಸಾಧನೆ ಮಾಡಿ, ಆತ್ಮವಿಶ್ವಾಸ ಹೊಂದಿ ಮುನ್ನಡೆಯಬೇಕು. ತಾವು ಹೊಂದಿರುವ ಪ್ರತಿಭೆಯಿಂದ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಾಧನೆ ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸರ್ಕಾರಿ ಕಚೇರಿಗಳು, ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಸೌಕರ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಯುವ ಸಬಲೀಕರಣ ಹಾಗೂ ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ ವಿಶ್ವ ವಿಶೇಷಚೇತನರ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶೇಷಚೇತನರ ಹಕ್ಕುಗಳ ಕಾಯ್ದೆ 2016 ರನ್ವಯ ವಿಶೇಷಚೇತನರನ್ನು ಮುಖ್ಯವಾಹಿನಿಗೆ ತರುವ ಮೂಲಕ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಕುಂದುಕೊರತೆ ಸಭೆ ನಡೆಸಿ, ಸಮಸ್ಯೆ ಆಲಿಸಲಾಗಿದೆ. ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಲು ತಾಲೂಕು ಮಟ್ಟದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅವರಿಗಾಗಿ ಮೀಸಲಿಟ್ಟ ಶೇ.5ರಷ್ಟು ಅನುದಾನವನ್ನು ವಿವಿಧ ಯೋಜನೆಗಳಡಿ ಬಕೆಯಾಗಿರುವ ಕುರಿತು ಪ್ರದರ್ಶನಾ ಫಲಕಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕರು ವೀಕ್ಷಿಸುವ ಅನುಕೂಲಕ್ಕಾಗಿ ಕ್ರಮವಹಿಸಲಾಗುತ್ತಿದೆ. ಸರ್ಕಾರ ವಿಶೇಷಚೇತನರಿಗೆ ನಿಗದಿ ಪಡೆಸಿದ ಗುರಿಯನ್ವಯ ಆದ್ಯತೆ ಮೆರೆಗೆ ವಸತಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಯುಡಿಐ ಹೊಂದಿರದ ಫಲಾನುಭವಿಗಳಿಗೆ ಒಗ್ಗೂಡಿಸಿ ಶಿಬಿರ ಆಯೋಜಿಸಿ ವಿಶೇಷ ಚೇತನರ ಗುರುತಿನ ಕಾರ್ಡ್ ವಿತರಣೆಗೂ ಕ್ರಮವಹಿಸಿದ್ದು ಅರ್ಹರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜೀವನದಲ್ಲಿ ಬರುವ ಸಮಸ್ಯೆಗಳನ್ನು ಎದುರಿಸಲು ಆತ್ಮವಿಶ್ವಾಸ ಅಗತ್ಯ. ಸಕಾರಾತ್ಮವಾಗಿ ಯೋಚನೆ ಮಾಡಿ ಸಮಸ್ಯೆಗಳಿಂದ ಹೊರ ಬಂದು ಉತ್ತಮ ಸುಗಮ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳಬೇಕು. ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡೆಸಿಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷಚೇತನರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಲು ಭಾಗವಹಿಸುವಂತೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ವಿಶೇಷಚೇತನರು ತಮ್ಮಲ್ಲಿರುವ ವಿಶ್ವಾಸ ಕಳೆದುಕೊಳ್ಳದೆ ಸಮಾಜದಲ್ಲಿ ಮುಂದೆ ಬರುವ ಮನೋಭಾವ ಹೊಂದಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಎಸ್.ಎನ್. ಬಸವ ರೆಡ್ಡಿ ಉಪನ್ಯಾಸ ನೀಡಿದರು. ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ವಿಜಯಪುರ ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಡಿವೈಎಸ್‌ಪಿ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ವಿಶೇಷ ಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.

ಜಾಥಾ:

ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಇಂಧನ ಚಾಲಿತ ತ್ರಿಚಕ್ರವಾಹನಗಳ ಜಾಥಾ ನಡೆಯಿತು.