೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ೪೨ ಸಾವಿರ ಕೋಟಿ ಅನುದಾನದಲ್ಲಿ ೩೦ ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ದಲಿತರನ್ನು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ವಂಚಿಸಿ ಸಾಧನಾ ಸಮಾವೇಶ ಸಂಘಟಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ದಲಿತ ಸಮುದಾಯಕ್ಕಾಗಿರುವ ವಂಚನೆ ಸರಿಪಡಿಸಿ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಲು ಮುಂದಾಗಬೇಕು ಎಂದು ಕದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ೪೨ ಸಾವಿರ ಕೋಟಿ ಅನುದಾನದಲ್ಲಿ ೩೦ ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ದಲಿತರನ್ನು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ವಂಚಿಸಿ ಸಾಧನಾ ಸಮಾವೇಶ ಸಂಘಟಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕೆಂದರು.

ಸಮುದಾಯದ ಹಣ ದುರ್ಬಳಕೆಗಳನ್ನೇ ೧೦೦೦ ದಿನಗಳ ಸಾಧನೆ ಎಂದುಕೊಂಡು ಸಮಾವೇಶ ನಡೆಸುತ್ತಿರುವುದು ನೈತಿಕ ಪ್ರಜಾಪ್ರಭುತ್ವದ ಅಧಃಪತನವಾಗಿದೆ. ಆದ್ದರಿಂದ ಪ್ರಸಕ್ತ ಬಜೆಟ್‌ನಲ್ಲಿ ತೆಲಂಗಾಣ ರಾಜ್ಯದ ಮಾದರಿ ರಾಜ್ಯದ ಪ್ರತಿ ಕುಟುಂಬಕ್ಕೆ ೨೫ ಲಕ್ಷ ರು. ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಎಸ್ಸಿ, ಎಸ್ಟಿಗೆ ಅನುದಾನ ಮೀಸರಿಲಿಸಿ:

ಬಜೆಟ್‌ನಲ್ಲಿ ಗ್ಯಾರಂಟಿಗೆಂದು ೫೬ ಸಾವಿರ ಕೋಟಿ ಅನುದಾನ ಘೋಷಿಸಿದ್ದರೂ ಪರಿಶಿಷ್ಟರಿಗೆ ಮೀಸಲಿರಿಸಿದ ಅನುದಾನ ವರ್ಗಾಯಿಸಿದ್ದೇಕೆ ಎಂಬುದಕ್ಕೆ ಉತ್ತರಿಸಬೇಕು. ೨೦೧೩ರಲಿ ಎಸ್ಸಿ-ಎಸ್ಪಿ, ಟಿಎಸ್ಪಿ ಅನುದಾನದ ೨ ಲಕ್ಷ ಕೋಟಿ ರು.ಗಳನ್ನು ಅನ್ಯ ಯೋಜನೆಗಳಿಗೆ ಬಳಸಲಾಗಿದೆ. ಆದ್ದರಿಂದ ಪ್ರಸಕ್ತ ಬಜೆಟ್‌ನಲ್ಲಿ ೨೫ ಲಕ್ಷ ರು.ಪ್ರತಿ ಕುಟುಂಬಕ್ಕೆ ಮೀಸಲಿಡಬೇಕು. ಮರ್ಯಾದೆ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಬೇಕು. ತಮಿಳುನಾಡು ಸರ್ಕಾರದಂತೆ ಶೇ.೭೫ರಷ್ಟು ಮೀಸಲಾತಿ ನೀತಿ ಜಾರಿ ಮಾಡಬೇಕು. ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಬೇಕು. ಸರ್ಕಾರಿ ಸೇವಾ ಸಂಸ್ಥೆಗಳು, ಕೈಗಾರಿಕೆಗಳನ್ನು ಖಾಸಗೀಕರಣ ನಿಲ್ಲಿಸಿ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೃಷಿ ಕೂಲಿ ಕಾರ್ಮಿಕ ಮಹಿಳೆಯರಿಗೂ ಕೂಲಿ ಸಹಿತ ಋತುಚಕ್ರ ರಜೆ ಘೋಷಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಬಿ.ಆನಂದ್, ಸುರೇಶ್‌ಕುಮಾರ್, ಜಿ.ಸುಶ್ಮಿತಾ, ಬಿ.ಎಸ್.ಗೀತಾ, ಪುಟ್ಟಲಿಂಗಯ್ಯ, ಗೀತಾ ಗೋಷ್ಠಿಯಲ್ಲಿದ್ದರು.