ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಇಲ್ಲಿನ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದಲ್ಲಿ 16ನೇ ವರ್ಷದ ಫಲಪುಷ್ಪ ಪ್ರದರ್ಶನವನ್ನು ಜ. 26ರಿಂದ 28ರವರೆಗೆ ಆಯೋಜಿಸಲಾಗಿದೆ.
ಉಡುಪಿ: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಇಲ್ಲಿನ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದಲ್ಲಿ 16ನೇ ವರ್ಷದ ಫಲಪುಷ್ಪ ಪ್ರದರ್ಶನವನ್ನು ಜ. 26ರಿಂದ 28ರವರೆಗೆ ಆಯೋಜಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು. ನಾಡಿನ ಹೆಮ್ಮೆಯ ಪರಿಸರಪ್ರೇಮಿ ದಿವಂಗತ ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಈ ಫಲಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತಿದೆ. ಜ. 26ರಂದು ಬೆಳಿಗ್ಗೆ 8 ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಶಾಸಕ ಯಶಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸುಮಾರು 15 ಲಕ್ಷ ರು. ವೆಚ್ಚದಲ್ಲಿ ನಡೆಯುವ ಈ ಫಲಪುಷ್ಪ ಪ್ರದರ್ಶನದ ಅಂಗವಾಗಿ ಪೆಟೂನಿಯ, ಸೆಲೋಷಿಯಾ, ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಅಸ್ಟರ್, ಬಾಲ್ಸಮ್, ತೊರೇನಿಯ, ಗುಲಾಬಿ, ಟೆಕೋಮಾ, ದಾಸವಾಳ, ಪ್ಯಾನ್ಸಿ, ಇಂಪೇಷಿಯನ್ಸ್ ಇತ್ಯಾದಿ 26 ವಿವಿಧ ಬಗೆಯ 7000ಕ್ಕೂ ಹೆಚ್ಚು ಸ್ಥಳೀಯ ಮತ್ತು ಹೊರ ಜಿಲ್ಲೆಗಳಿಂದ ತರಿಸಲಾಗುವ ಹೂವಿನ ಗಿಡಗಳನ್ನು ಪ್ರದರ್ಶಿಸಲಾಗುತ್ತದೆಹೂವಿನ ಗಿಡಗಳ ಮೂಲಕ ಸಾಲುಮರದ ತಿಮ್ಮಕ್ಕನವರ ಜೀವನ ಮತ್ತು ಸಾಧನೆಗಳ ಬಗ್ಗೆ ಕಲಾ ಕೃತಿಗಳನ್ನು ಪ್ರದರ್ಶನ, ವಿವಿಧ ಕಲಾಕೃತಿಗಳನ್ನು ತಯಾರಿ, ತೆಂಗಿನ ಗರಿಗಳಿಂದ ಜಾನೂರ್ ಆರ್ಟ್ ಕಲಾಕೃತಿಗಳು, ಹೂವುಗಳಿಂದ ತಯಾರಿಸಿದ ಸಲ್ಫಿ ಝೋನ್, ಅಲಂಕಾರಿಕ ಗಿಡಗಳ ಕುಂಡಗಳ ಜೋಡಣೆ, ವಿವಿಧ ತರಕಾರಿಗಳ ಮಾದರಿ ಕೈತೋಟ ಹಾಗೂ ಮೈಕ್ರೋ ಗ್ರೀನ್ಸ್ ಬಗ್ಗೆ ಪ್ರಾತ್ಯಕ್ಷತೆ ಇರುತ್ತದೆ.
ಅಲ್ಲದೇ ಜ. 26ರಂದುಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ, 27 ರಂದು ಜಿಐ ಮಾನ್ಯತೆ ಪಡೆದಿರುವ ಉಡುಪಿ ಮಲ್ಲಿಗೆ ಹಾಗೂ ಮಟ್ಟು ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶ ಹಾಗೂ 28ರಂದು ಕೈತೋಟ ಮತ್ತು ತಾರಸಿ ತೋಟ ನಿರ್ಮಾಣ ಹಾಗೂ ನಿರ್ವಹಣೆ ವಿಚಾರ ಸಂಕೀರ್ಣವನ್ನು ಏರ್ಪಡಿಸಿದೆ. ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ, ಜಿಲ್ಲೆಯ ರೈತರು ಬೆಳೆದಿರುವಂತಹ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರು ಬೆಳೆಗಳ ಪ್ರದರ್ಶನ ಕೂಡ ಇರುತ್ತದೆ ಎಂದವರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಉಪಸ್ಥಿತರಿದ್ದರು.