ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಜತೆಗೆ ಯುವಜನರಲ್ಲಿ ದೇಶಪ್ರೇಮ ಬೆಳೆಸುವ ಉದ್ದೇಶದಿಂದ ರಾಷ್ಟ್ರಧ್ವಜದ ಭವ್ಯ ಯಾತ್ರೆ ಆಯೋಜಿಸಲಾಗಿದೆ.
ಕಲಘಟಗಿ:
ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಾಭಿಮಾನವನ್ನು ಜಾಗೃತಗೊಳಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಹೇಳಿದರು.ಗುರುವಾರ ಪಟ್ಟಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ‘ಹರ್ ಘರ್ ತಿರಂಗಾ’ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಜತೆಗೆ ಯುವಜನರಲ್ಲಿ ದೇಶಪ್ರೇಮ ಬೆಳೆಸುವ ಉದ್ದೇಶದಿಂದ ರಾಷ್ಟ್ರಧ್ವಜದ ಭವ್ಯ ಯಾತ್ರೆ ಆಯೋಜಿಸಲಾಗಿದೆ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ತಿರಂಗಾ ಯಾತ್ರೆಯಲ್ಲಿ ಜಿಇ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ವಿದ್ಯಾರ್ಥಿಗಳು 500 ಅಡಿ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಿದರು. ರಭಸವಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ಈ ವೇಳೆ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಯಲ್ಲಾರಿ ಸಿಂಧೆ, ಶಶಿಧರ ನಿಂಬಣ್ಣನವರ, ಕಿರಣ್ ಪಾಟೀಲ್ ಕುಲಕರ್ಣಿ, ಬಸವರಾಜ ಶೆರೇವಾಡ, ಮಹಾಂತೇಶ ತಹಸೀಲ್ದಾರ್, ಗಂಗಾಧರ ಗೌಳಿ, ಅಣ್ಣಪ್ಪ ಓಲೆಕಾರ, ಸುರೇಶ ಶೀಲವಂತ, ರಾಘವೇಂದ್ರ ಅಳ್ನಾವರ, ಚಂದ್ರುಗೌಡ ಪಾಟೀಲ, ಸುರೇಶ ಕಮ್ಮಾರ, ಶ್ರೀಧರ ದ್ಯಾವಪ್ಪನವರ, ವಿನಾಯಕ ಗೌಳಿ, ಆನಂದ ಕಡ್ಲಾಸ್ಕರ್, ರಾಘವೇಂದ್ರ ಹುಲಿಹೊಂಡ ಸೇರಿದಂತೆ ವಿದ್ಯಾರ್ಥಿಗಳಿದ್ದರು.