ಸಾರಾಂಶ
ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು.
ತಹಸೀಲ್ದಾರರು ಮತ್ತು ತಾ.ಪಂ. ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಸಲಹೆ ನೀಡಿದರು.
ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದರು.
ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಇಇ ಸುರೇಶ್ ಕುಮಾರ್ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ತಹಸೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ, ಹಾಗೆಯೇ ತಾ.ಪಂ. ಇಒಗಳಾದ ಶೇಖರ್, ಅಪ್ಪಣ್ಣ, ಕುಡಿಯುವ ನೀರು ಪೂರೈಕೆಗೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ವಿಜಯ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಹೇಮಂತ್ ಕುಮಾರ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಕಾರ್ಮಿಕ ಅಧಿಕಾರಿ ಹರ್ಷವರ್ಧನ ಇದ್ದರು.