ಸಾರಾಂಶ
ಕನ್ನಡಪ್ರಭ ವಾರ್ತೆ ಬೀದರ್
ಕಲಾವಿದರನ್ನು ಉಳಿಸಿ ಬೆಳೆಸುವುದಕ್ಕಾಗಿ ಜನಪರ ಉತ್ಸವದಂತಹ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಹೇಳಿದರು.ಅವರು ಸೋಮವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ, ಕರ್ನಾಟಕ ಸಂಭ್ರಮ-50 ಅಂಗವಾಗಿ ಹಮ್ಮಿಕೊಂಡಿದ್ದ ಜನಪರ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಯು ಗ್ರಾಮೀಣ ಭಾಗದ ಬಡವರು, ಹಿಂದುಳಿದವರು ಮತ್ತು ದಲಿತರಲ್ಲಿ ಉಳಿದಿದೆ. ಹಾಗಾಗಿ ಈ ಕಲೆಯನ್ನು ಮುಂದಿನ ಯುವ ಪೀಳಿಗೆಗೆ ಮುಂದುವರಿಸಿಕೊಂಡು ಹೋಗಲು ಅವರಿಗೂ ಕಲಿಸಬೇಕು. ಇಂದಿನ ಕಲೆಯಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ. ಹಿಂದೆ ನಮ್ಮ ತಾತ, ಅಜ್ಜಿಯರು ನಮಗೆ ಹಲವಾರು ಜನಪದ ಹಾಡುಗಳನ್ನು ಕಲಿಸುತ್ತಿದ್ದರು ಎಂದರು.ಹಳ್ಳಿಗಳಲ್ಲಿ ನಾಟಕ ಕೋಲಾಟ. ಭಜನೆ ಪದಗಳನ್ನು ನಾವು ಹಿಂದೆ ಕುಳಿತು ಕೇಳುತ್ತಿದ್ದೇವು. ಈಗ ಇಂಥಹ ಕಲೆಗಳು ನಶಿಸುತ್ತಿದ್ದು, ಅದನ್ನು ಕಲಾವಿದರಾದ ತಾವುಗಳು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಈ ಹಿಂದೆ ಕಲಾವಿದರಿಗೆ ನೀಡುತ್ತಿದ್ದ ಎರಡು ಸಾವಿರ ಮಾಶಾಸನವನ್ನು 3000 ರುಪಾಯಿ ಮಾಡಿದ್ದೇನೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮಾತನಾಡಿ, ಕಲ್ಯಾಣ ಕರ್ನಾಟಕ ಕಲಾವಿದರಲ್ಲಿ ನಿಜವಾದ ಕಲೆ ಇದ್ದು ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಕೌಶಲ್ಯ ಅವರಲ್ಲಿ ಇಲ್ಲ, ಹಾಗಾಗಿ ನಮ್ಮ ಭಾಗದ 7 ಜಿಲ್ಲೆಗಳ ಕಲಾವಿದರಿಗೆ 10 ದಿನಗಳ ತರಬೇತಿ ಕೊಡುವಂತಾಗಬೇಕು ಈ ಭಾಗದಲ್ಲಿ 75 ಸಾವಿರ ಜನ ಕಲಾವಿದರಿದ್ದಾರೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜನಪರ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಕಲಾವಿದರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಪ್ರತಿಭಾವಂತ ಕಲಾವಿದರನ್ನು ಗುರುತಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಕಲಾ ತಂಡಗಳ ಮೆರವಣಿಗೆಗೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಪಂ ಸಿಇಒ ಡಾ. ಗಿರೀಶ. ದಿಲೀಪ ಬದೋಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚಾಲನೆ ನೀಡಿದರು. ಡೊಳ್ಳು ಕುಣಿತ, ಹೆಜ್ಜೆಮೇಳ, ಲಂಬಾಣಿ ನೃತ್ಯ, ತಮಟೆವಾದನ ಹಾಗೂ ಪೋತರಾಜ ವೇಷದಾರಿಗಳು ನೋಡುಗರ ಗಮನ ಸೆಳೆದರು.ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಶಂಬುಲಿಂಗ ವಾಲದೊಡ್ಡಿ, ಬೀದರ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂಎಸ್ ಮನೋಹರ, ಹಿರಿಯರಾದ ಮಾರುತಿ ಕಂಠಿ, ಸಾಹಿತಿಗಳಾದ ಎಸ್ಬಿ ಕುಚಬಾಳ ಸೇರಿದಂತೆ ಬೀದರ್ ಜಿಲ್ಲೆ ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ ಆಗಮಿಸಿದ ವಿವಿಧ ಕಲಾವಿದರು ಭಾಗವಹಿಸಿದ್ದರು.