ಸಾರಾಂಶ
ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಕನ್ನಡ ಸಾಹಿತ್ಯದಲ್ಲಿ ಜಾನಪದ ಸಾಹಿತ್ಯ ಅತ್ಯಂತ ಪ್ರಾಚೀನ ಸಾಹಿತ್ಯ ಪ್ರಾಕಾರಗಳಲ್ಲಿ ಒಂದಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.ಸೋಮವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಸಾಪ ಏರ್ಪಡಿಸಿದ್ದ ಶ್ರಾವಣ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಜಾನಪದ ಸಾಹಿತ್ಯದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರ ಬಾಯಿಂದ ಬಾಯಿಗೆ ಹರಡುವ ಮಾತುಗಳೇ ಜಾನಪದ ಸಾಹಿತ್ಯವಾಗುತ್ತದೆ.ಇತ್ತೀಚಿನ ವರ್ಷಗಳಲ್ಲಿ ಯುವ ಪೀಳಿಗೆ ಯವರು ಜಾನಪದ ಸಾಹಿತ್ಯದ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ಜಾನಪದ ಸಾಹಿತ್ಯದಲ್ಲಿ ಬರುವ ಒಗಟು, ಗಾದೆ,ರಾಗಿ ಬೀಸುವ ಹಾಡು, ಸೋಬಾನೆ ಹಾಡು, ಕೋಲಾಟ ಮುಂತಾದ ಜಾನಪದ ಪ್ರಕಾರಗಳನ್ನು ಜೀವಂತವಾಗಿ ಇಡಬೇಕಾದ ಜವಬ್ದಾರಿ ನಮ್ಮ ಮೇಲಿದೆ. ಜನಪದವೇ ಸತ್ಯ, ಜಾನಪದವೇ ನಿತ್ಯವಾಗಬೇಕು. ಜಾನಪದ ಅಳಿದರೆ ಮನುಕುಲ ಅಳಿದಂತೆ ಎಂದು ಅವರು ತಿಳಿಸಿದರು. ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಶ್ರಾವಣ ಮಾಸದಲ್ಲಿ ಕಸಾಪದಿಂದ ಮಕ್ಕಳಿಗೆ ರಸ ಪ್ರಶ್ನೆ ಮೂಲಕ ಜ್ಞಾನದ ಭಂಡಾರ ಬಿತ್ತುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಜಾನಪದ ಬಗ್ಗೆ ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮ ನಡೆಸಲಿದ್ದೇವೆ. ನವೆಂಬರ್ ತಿಂಗಳಲ್ಲಿ ಕನ್ನಡ ಭಾಷೆ ಬಗ್ಗೆ ಹೆಚ್ಚು ಕಾರ್ಯಕ್ರಮ ನಡೆಸಲಿದ್ದೇವೆ. ಬರುವ ದಿನಗಳಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದರು. ಕ.ಸಾ.ಪ ಪ್ರಧಾನ ಕಾರ್ಯದರ್ಶಿ ನಂದಿನಿ ಆಲಂದೂರು ಪ್ರಾಸ್ತಾವಿಕವಾಗಿ ಮಾತನಾಡಿ, ಕಸಾಪದಿಂದ ಶಾಲಾ, ಕಾಲೇಜು ಗಳಲ್ಲಿ ಪ್ರತಿಭಾ ಪುರಸ್ಕಾರ, ಮಕ್ಕಳಿಗೆ ರಸ ಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದ್ದೇವೆ. ಜಾನಪದ ಕಲೆಯಾದ ಗಾದೆ ಹಾಗೂ ಒಗಟು ಬಿಡಿಸುವ ಕಾರ್ಯಕ್ರಮವನ್ನು ವಿವಿಧ ಶಾಲೆಗಳಲ್ಲಿ ಈಗಾಗಲೇ ಕಸಾಪ ನಡೆಸಿದೆ ಎಂದರು.ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ 8 ಮಕ್ಕಳಿಗೆ ಕಾಲೇಜು ಕಣ್ಮಣಿಗಳು ಎಂಬ ಬಿರುದು, ಪುಸ್ತಕ ಹಾಗೂ ಸರ್ಟಿಫಿಕೇಟ್ ಗೌರವಿಸಲಾಯಿತು.ಸಭೆಯಲ್ಲಿ ಕಸಾಪ ಹೋಬಳಿ ಅಧ್ಯಕ್ಷ ಉದಯ ಗಿಲ್ಲಿ, ನಗರ ಘಟಕದ ಅಧ್ಯಕ್ಷ ಸತ್ಯಪ್ರಸಾದ್, ಸದಸ್ಯ ಅಜಂತ ಇದ್ದರು. ನಂತರ ಕಸಾಪ ಅಧ್ಯಕ್ಷ ಪೂರ್ಣೇಶ್ ಅವರು ಮಕ್ಕಳಿಗೆ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಉಪನ್ಯಾಸಕಿ ಸವಿತ ಸ್ವಾಗತಿಸಿದರು.