ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ. ೬ ರಂದು ಮಂಡಿಸಲಿರುವ ೨೦೨೬-೨೭ನೇ ಸಾಲಿನ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ೧೭ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.
ವಾರ್ತಾ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೆ (ಎಲ್ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಬೆಳಗ್ಗೆ ೧೦.೧೫ ಗಂಟೆಯಿಂದ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ನೇರ ಪ್ರಸಾರ ಮಾಡಲಾಗುತ್ತದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
