ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್‌ಪಿಒ ರಚನೆ ಮಾಡಿದೆ. ಆದರೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಬೀದರ್: ರಾಜ್ಯ ಸರ್ಕಾರದಿಂದ ರಚನೆಯಾದ ರೈತ ಉತ್ಪಾದಕರ ಸಂಸ್ಥೆ (ಎಫ್‌ಪಿಒ)ಗಳಿಗೆ ಬಾಕಿ ಇರುವ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು, ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್‌ಪಿಒ ರಚನೆ ಮಾಡಿದೆ. ಆದರೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಸ್ವಾತಂತ್ರ್ಯ ಅಮೃತ ನೆನಪಿಗಾಗಿ ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಚನೆ ಮಾಡಲಾಗಿತ್ತು. 2021-22ರಿಂದ ಈವರೆಗೆ ರಾಜ್ಯದಲ್ಲಿ 490 ರೈತ ಉತ್ಪಾದಕರ ಸಂಸ್ಥೆಗಳು ರಚನೆಯಾಗಿವೆ. ಅಂದಾಜು 150 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕಿದ್ದು, ಇದರಲ್ಲಿ ಶೇ.12ರಷ್ಟು ಮಾತ್ರ ಬಿಡುಗಡೆ ಮಾಡಲಾಗಿದೆ. ಶೇ.12ರಷ್ಟು ಅನುದಾನ ಕಳೆದ ಬಿಜೆಪಿ ಸರ್ಕಾರದಲ್ಲಿ ಬಿಡುಗಡೆಯಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ ಈವರೆಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ. ಇದರಿಂದ ರೈತ ಉತ್ಪಾದಕರ ಸಂಸ್ಥೆಗಳ ಅಭಿವೃದ್ಧಿ ಕುಂಠಿತವಾಗಿವೆ ಎಂದು ಹೇಳಿದ್ದಾರೆ.

ಅನುದಾನ ಬಿಡುಗಡೆಯಾಗದ ಕಾರಣ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಯಾಗುತ್ತಿದೆ. ಆದಷ್ಟೂ ಬೇಗ ಬಾಕಿ ಇರುವ ಅನುದಾನವನ್ನು ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಂಜುಕುಮಾರ ಪಾಟೀಲ್, ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಪ್ರಮುಖರಾದ ರಾಜೇಂದ್ರ ಪೂಜಾರಿ, ಮಹೇಶ ಪಾಲಂ, ಚಂದ್ರಶೇಖರ ಪಾಟೀಲ್, ನಾಗರಾಜ ಕರ್ಪೂರ್, ರಾಜಕುಮಾರ ಹರಕಂಚಿ, ಸುದರ್ಶನ, ವೆಂಕಟ ಇತರರಿದ್ದರು.