ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್‌ ಮಾಹಿತಿ

ಅಪಾಯದ ಮರಗಳು ಕಂಡುಬಂದರೆ ತಕ್ಷಣ ಅರಣ್ಯ ತಿಳಿಸಲು ಮನವಿ

ಕನ್ನಡಪ್ರಷಭವಾರ್ತೆ, ಸಕಲೇಶಪುರ

ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಯಿಂದ ಸಾರ್ವಜನಿಕ ಆಸ್ತಿ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿರುವ ಮರಗಳನ್ನು ತ್ವರಿತವಾಗಿ ತೆರವುಗೊಳಿಸಲು ಅರಣ್ಯ ಇಲಾಖೆ ಸಜ್ಜಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಚ್.ಆರ್. ಹೇಮಂತ್ ಕುಮಾರ್ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಮಳೆ ಮತ್ತು ಗಾಳಿಯಿಂದ ಬಿದ್ದಿರುವ ಹಾಗೂ ಅಪಾಯದ ಸ್ಥಿತಿಯಲ್ಲಿರುವ ಮರ-ಗಿಡಗಳನ್ನು ಆದ್ಯತೆ ಮೇರೆಗೆ ತೆರವುಗೊಳಿಸಲಾಗುತ್ತಿದೆ. ಹಾನುಬಾಳು ಕ್ಲಬ್ ಸಮೀಪ, ಮಾರನಹಳ್ಳಿ–ಕೆಂಪುಹೊಳೆ ರಸ್ತೆ, ಎಪಿಎಂಸಿ ಸಮೀಪ ಸೇರಿದಂತೆ ವಿವಿಧೆಡೆ ರಸ್ತೆ ಮೇಲೆ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಲಾಗಿದೆ ಎಂದು ಹೇಳಿದರು.ಎಲ್ಲೆಲ್ಲಿ ಮರಗಳು ಬಿದ್ದಿವೆ ಎಂಬ ಮಾಹಿತಿ ಬಂದ ಕೂಡಲೇ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ರೈಲ್ವೆ ಇಲಾಖೆಯೊಂದಿಗೆ ಜಂಟಿಯಾಗಿ ಸಕಲೇಶಪುರದಿಂದ ಯಡಕುಮಾರಿ ಗಡಿವರೆಗಿನ ಸುಮಾರು 25 ಕಿಲೋಮೀಟರ್ ರೈಲು ಮಾರ್ಗದಲ್ಲಿ ಮುನ್ನೆಚ್ಚರಿಕೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಸ್ತುತ ಯಾವುದೇ ಆತಂಕದ ಪರಿಸ್ಥಿತಿ ಕಂಡುಬಂದಿಲ್ಲ. ರೈಲು ಮಾರ್ಗದ ಬಳಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ತಿವಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಧುಸೂದನ್, ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹಾಗೂ ತಹಸೀಲ್ದಾರ್ ಸುಪ್ರೀತಾ ಅವರ ನಿರ್ದೇಶನದಂತೆ ಅರಣ್ಯ ಇಲಾಖೆ ನಿರಂತರ ನಿಗಾ ವಹಿಸಿದೆ. ಸಾರ್ವಜನಿಕರಿಂದ ಮಾಹಿತಿ ಬಂದ ತಕ್ಷಣ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಮರಗಳನ್ನು ತೆರವುಗೊಳಿಸುವ ಕಾರ್ಯ ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.ಇತ್ತೀಚೆಗೆ ಬ್ಯಾಕರವಳ್ಳಿ ಸಮೀಪ ರಸ್ತೆ ಮೇಲೆ ಬಿದ್ದಿದ್ದ ಬೃಹತ್ ಬೀಟೆ ಮರವನ್ನು ತೆರವುಗೊಳಿಸಲಾಗಿದೆ. ಮಳೆಗಾಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯದ ಮರಗಳು ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.