ಬಿಆರ್‌ಟಿ ಅರಣ್ಯಕ್ಕೆ ಬೆಂಕಿ: ಅರಣ್ಯ ನಾಶ

| Published : Mar 31 2024, 02:03 AM IST

ಸಾರಾಂಶ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ. ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಬೈಲೂರು ವಲಯದ ಕೆ.ಕೆ.ಡ್ಯಾಂ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.

ಈ ವೇಳೆ ಮತ್ತೊಂದು ಕಡೆ ಬೆಂಕಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಜೋರಾದ ಗಾಳಿ ಇರುವ ಕಾರಣ ಬೆಂಕಿ ಕೆನ್ನಾಲಗೆ ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಕೆನ್ನಾಲಗೆಗೆ ಕುರುಚಲು ಗಿಡ, ಹುಲ್ಲು ಜಾತಿ ಗಿಡಗಳು ಸಂಪೂರ್ಣ ನಾಶವಾಗಿದೆ. ಈ ಭಾಗದಲ್ಲಿ ಹೆಚ್ಚಾಗಿ ಹುಲ್ಲಿನ ಜಾತಿ ಗಿಡಗಳಿದ್ದು, ಬೇಸಿಗೆಯಿಂದಾಗಿ ಸಂಪೂರ್ಣವಾಗಿ ಒಣಗಿವೆ. ಇದರಿಂದಾಗಿ ವೇಗವಾಗಿ ಬೆಂಕಿ ಹರಡುತ್ತಿದೆ. ಟವರ್‌ಗಳ ಮೂಲಕ ಸಿಬ್ಬಂದಿ ಬೆಂಕಿ ಕಾಣಿಸಿಕೊಳ್ಳುವ ಕಡೆ ತೆರಳಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.

ಕಿಡಿಗೇಡಿಗಳಿಂದ ಕೃತ್ಯ: ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಬಿ.ಆರ್‌.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು, ಯಳಂದೂರು ವಲಯಗಳಲ್ಲೂ ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿತ್ತು.

ಡ್ರೋನ್‌ ಕಾರ್ಯಾಚರಣೆ: ಕೆ.ಕೆ.ಡ್ಯಾಂ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕಡೆ ನಿಗಾ ಇಡಲು ಡ್ರೋನ್‌ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಕಿ ಹರಡುವ ಕಡೆ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್‌ ಸಹಾಯದಿಂದ ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಕೆಲ ಕಡೆ ಬೆಂಕಿ ಹತೋಟಿಗೆ ಬಂದಿದೆ. ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಎಷ್ಟು ಎಕರೆ ಪ್ರದೇಶ ನಾಶವಾಗಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಸ್ಥಳದಲ್ಲಿ ಸಿಬ್ಬಂದಿ ಬೀಡು ಬಿಟ್ಟು ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ಮಾಹಿತಿ ನೀಡಿದರು.