ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ

| Published : Feb 25 2024, 01:45 AM IST

ಸಾರಾಂಶ

ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ, ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ಶಿರಸಿ:

ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ, ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರವನ್ನು ಆಗ್ರಹಿಸಿದರು.ಬನವಾಸಿ ರಸ್ತೆಯಲ್ಲಿರುವ ಅರಣ್ಯ ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ನಗರದ ಹಳೆ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಪ್ರತಿಭಟನೆಯಲ್ಲಿ ಅರಣ್ಯ ಕಾಲೇಜಿನ ವಿದ್ಯಾರ್ಥಿ ಯಶಸ್ ಟಿ.ಎನ್. ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಅರಣ್ಯ ಪದವೀಧರ ವಿದ್ಯಾರ್ಥಿಗಳಿಗೆ ಅವಕಾಶ ನೀಡದಿರುವುದರಿಂದ ಅರಣ್ಯ ಶಾಸ್ತ್ರ ಪದವೀಧರ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸಲು ಒತ್ತಾಯಿಸಿ, ಶಿರಸಿ ಕೊಡಗಿನ ಪೊನ್ನಂಪೇಟೆ ಹಾಗೂ ಶಿವಮೊಗ್ಗದ ಇರುವಕ್ಕಿಯ ಅರಣ್ಯ ಮಹಾವಿದ್ಯಾಲಯದ ೭೦೦ ವಿದ್ಯಾರ್ಥಿಗಳು ಕಳೆದ ೧೪ ದಿನಗಳಿಂದ ತರಗತಿ ಬಹಿಷ್ಕರಿಸಿ, ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದೇವೆ. ಅರಣ್ಯ ಇಲಾಖೆಯಲ್ಲಿ ಅರಣ್ಯ ಪದವಿ ಕನಿಷ್ಠ ವಿದ್ಯಾರ್ಹತೆಯಾಗುವವರೆಗೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ಪದವೀಧರರಿಗೆ ಅವರದ್ದೇ ಆದ ವೃತ್ತಿಪರ ಪದವಿಯೇ ಕನಿಷ್ಠ ವಿದ್ಯಾರ್ಹತೆಯಾಗಿದೆ. ಆದರೆ ಅರಣ್ಯ ಶಾಸ್ತ್ರ ಪದವೀಧರಿಗೆ ಮಲತಾಯಿ ಧೋರಣೆ ಯಾಕೆ ಎಂದು ಪ್ರಶ್ನಿಸಿದ ಅವರು, ಈಗಾಗಲೇ ೧೦೦ ಶಾಸಕರು, ೨೦ ಸಚಿವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಇಲಾಖೆ ಸಚಿವರನ್ನು ಭೇಟಿ ಮಾಡಿದ್ದೇವೆ. ಉತ್ತಮ ಸ್ಪಂದನೆ ನೀಡಿದ್ದಾರೆ. ಆದರೆ ಫಲಿತಾಂಶ ಮಾತ್ರ ದೊರೆತಿಲ್ಲ. ಡಿವೈಆರ್‌ಎಫ್‌ಒ, ಆರ್‌ಎಫ್‌ಒ ಹಾಗೂ ಎಸಿಎಫ್ ಹುದ್ದೆಗಳಿಗೆ ಅರಣ್ಯ ಪದವೀಧರರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಮುಖ್ಯಮಂತ್ರಿ ಗೃಹ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.ಪ್ರತಿಭಟನೆಯಲ್ಲಿ ಕೆ.ಯು. ತನ್ಮಿತಾ, ವೈಷ್ಣವಿ ಪಾಟೀಲ, ಸಂಜನಾ, ಶ್ರೀನಿಧಿ, ಅಕ್ಷಯಕುಮಾರ, ಸುಜಾತಾ, ಶ್ರೇಯಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಜನಪರ ಹೋರಾಟಗಾರ ವೇದಿಕೆ ಅಧ್ಯಕ್ಷ ನಾಗೇಶ ನಾಯ್ಕ ಕಾಗಾಲ, ಮಹಾದೇವ ಚಲವಾದಿ ಬೆಂಬಲ ಸೂಚಿಸಿದರು.