ಕನ್ನಡಪ್ರಭ ವಾರ್ತೆ ಆಲೂರು

ಪಾರಂಪರಿಕ ಆಹಾರ ಪದ್ಧತಿಯ ಬದಲಾವಣೆಯಿಂದ ರಕ್ತಹೀನತೆ, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಂಥ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್‌ ಫಾತಿಮಾ ಹೇಳಿದರು.

ತಾಲೂಕಿನ ಕದಾಳು ಗ್ರಾಮ ಪಂಚಾಯ್ತಿ ಕೇಂದ್ರದಲ್ಲಿ, ತಾಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಕದಾಳು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ, ಹರ್ಷಿತ ಆಲೂರು ಯೋಜನೆ ನೇತೃತ್ವದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಈಗ ಆರೋಗ್ಯಕರ ಆಹಾರ ಪದ್ಧತಿ ಮತ್ತು ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದೆ. ಪ್ರತಿಯೊಬ್ಬರೂ ಆರೋಗ್ಯವೇ ಶ್ರೀಮಂತಿಕೆ ಎಂದು ಅರಿತು ಬಾಳಬೇಕು. ಇತ್ತೀಚಿನ ದಿನಗಳಲ್ಲಿ ರಾಸಾಯನಿಕಯುಕ್ತ ಆಹಾರ ಸೇವನೆ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದ ವಿವಿಧ ಕಾಯಿಲೆಗಳು ಹೆಚ್ಚುತ್ತಿವೆ. ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ಆರೋಗ್ಯ ತಪಾಸಣಾ ಅಭಿಯಾನಗಳ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿವೆ. ಸಾರ್ವಜನಿಕರು ಇಂತಹ ಶಿಬಿರಗಳ ಪ್ರಯೋಜನ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.ಶಿಬಿರದಲ್ಲಿ ಅನೀಮಿಯಾ (ರಕ್ತಹೀನತೆ), ಮಧುಮೇಹ ಹಾಗೂ ರಕ್ತದೊತ್ತಡ (ಬಿಪಿ) ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಉಷಾ ಮಾತನಾಡಿ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಹಾಗೂ ಮನೆಯಲ್ಲಿಯೆ ಬೆಳೆದ ಪೌಷ್ಠಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವಕುಮಾರ್‌ ಮಾತನಾಡಿ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.ಹರ್ಷಿತ ಸಂಸ್ಥೆಯ ಅಧ್ಯಕ್ಷ ನಂಜಪ್ಪಶೆಟ್ಟಿ ಮಾತನಾಡಿ, ಸಂಸ್ಥೆಯು ಕಳೆದ ೨೮ ವರ್ಷಗಳಿಂದ ಸಮಾಜಮುಖಿ ಹಾಗೂ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ. ಗ್ರಾಮೀಣ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಸದಾ ತೊಡಗಿಸಿಕೊಂಡಿದೆ ಎಂದರು.ಹಾಸನ ಜಿಲ್ಲಾ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಕಲಾವತಿ ಮಧುಸೂದನ್, ಹರ್ಷಿತ ಸಂಸ್ಥೆಯ ಜಿಲ್ಲಾ ಸಂಯೋಜಕ ನವೀನ್, ಸಿಂಚನ, ಸ್ವಪ್ನ, ಗ್ರಾಮ ಪಂಚಾಯ್ತಿ ಸದಸ್ಯರು, ಕೃಷಿ ಸಖಿಯರು, ಆಶಾ ಕಾರ್ಯಕರ್ತೆಯರು, ಓಂ ತಂಡದ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುವರ್ಣ ಉಪಸ್ಥಿತರಿದ್ದರು. ಶಿಬಿರದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.