ಜಿಲ್ಲಾ ಕೇಂದ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ: ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ

| Published : Jun 04 2025, 02:10 AM IST

ಜಿಲ್ಲಾ ಕೇಂದ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ: ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ
Share this Article
  • FB
  • TW
  • Linkdin
  • Email

ಸಾರಾಂಶ

ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಮಾತನಾಡಿ, ರಾಣಿಬೆನ್ನೂರು ನಗರಕ್ಕೆ ಹೋಲಿಸಿದರೆ ಜಿಲ್ಲಾ ಕೇಂದ್ರ ಹಾವೇರಿ ನಗರ ತೀರಾ ಹಿಂದುಳಿದಿದೆ. ಹಾವೇರಿ ನಗರದ ಅಭಿವೃದ್ಧಿ ವಿಚಾರದಲ್ಲಿ ಅಗತ್ಯವಾದ ವಿಶೇಷ ಅನುದಾನ ನೀಡುವ ಕುರಿತು ವಿಶೇಷ ಮುತುವರ್ಜಿ ವಹಿಸಬೇಕು ಎಂದರು.

ಹಾವೇರಿ: ಜಿಲ್ಲಾ ಕೇಂದ್ರವಾಗಿ ಇಷ್ಟು ವರ್ಷವಾದರೂ ಹಾವೇರಿ ನಗರ ಮೂಲ ಸೌಕರ್ಯಗಳು ಇಲ್ಲದೇ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಅದಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ನಗರದ ಅಭಿವೃದ್ಧಿಗೆ ಸಹಕರಿಸಿ ಎಂದು ಎಂದು ಹಾವೇರಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಹಲವು ಸದಸ್ಯರು 5ನೇ ಹಣಕಾಸು ಆಯೋಗದ ಅಧ್ಯಕ್ಷರಲ್ಲಿ ಮನವಿ ಮಾಡಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಹಾವೇರಿ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಜತೆ ಸಂವಾದ ಸಭೆಯಲ್ಲಿ ಪಕ್ಷಭೇದ ಮರೆತು ಅಭಿವೃದ್ಧಿಗಾಗಿ ಸಹಕರಿಸುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಮಾತನಾಡಿ, ರಾಣಿಬೆನ್ನೂರು ನಗರಕ್ಕೆ ಹೋಲಿಸಿದರೆ ಜಿಲ್ಲಾ ಕೇಂದ್ರ ಹಾವೇರಿ ನಗರ ತೀರಾ ಹಿಂದುಳಿದಿದೆ. ಹಾವೇರಿ ನಗರದ ಅಭಿವೃದ್ಧಿ ವಿಚಾರದಲ್ಲಿ ಅಗತ್ಯವಾದ ವಿಶೇಷ ಅನುದಾನ ನೀಡುವ ಕುರಿತು ವಿಶೇಷ ಮುತುವರ್ಜಿ ವಹಿಸಬೇಕು ಎಂದರು. ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಮಾತನಾಡಿ, ಹಾವೇರಿ ಜಿಲ್ಲೆ ರಚನೆಯಾಗಿ 28 ವರ್ಷಗಳೇ ಕಳೆದಿವೆ. ಹಾವೇರಿ ಜತೆ ರಚನೆಯಾದ 7 ಜಿಲ್ಲೆಗಳು ಅಭಿವೃದ್ಧಿ ಕಾಣುತ್ತಿವೆ. ಆದರೆ, ಹಾವೇರಿ ಮಾತ್ರ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ಇಲ್ಲಿಗೆ ಬರಬೇಕಾದ ಅನುದಾನ ಸರಿಯಾಗಿ ಬರುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.ನಗರದ ಹೊರವಲಯದಲ್ಲಿ 800 ಎಕರೆ ವಿಸ್ತೀರ್ಣದ ಬೃಹತ್ ಹೆಗ್ಗೇರಿ ಕೆರೆ ಇದೆ. ತಾಲೂಕಿನಲ್ಲಿ ತುಂಗಭದ್ರಾ ಹಾಗೂ ವರದಾ ಎರಡು ನದಿಗಳು ಹರಿದಿವೆ. ಆದರೂ ಹಾವೇರಿ ನಗರ ಸೇರಿ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಆಗುತ್ತಿಲ್ಲ. ಇದಕ್ಕೆ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಹಾವೇರಿ ನಗರ ಕುಡಿಯುವ ನೀರು, ಒಳಚರಂಡಿ, ರಸ್ತೆ, ಇತರ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಇದರಿಂದ ಹಾವೇರಿಗೆ ಬರಲು ಹೊರಗಿನ ಜನ ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಜರುಗಿಸಿ ಎಂದು ಸದಸ್ಯರಾದ ಶಿವಯೋಗಿ ಹುಲಿಕಂತಿಮಠ, ಐ.ಯು ಪಠಾಣ ಹಾಗೂ ಇತರ ಸದಸ್ಯರು ಕೋರಿದರು.ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಎಸ್.ಎಸ್. ಮತ್ತಿಕಟ್ಟಿ, ನಗರಸಭೆ ಪೌರಾಯುಕ್ತ ಗಂಗಾಧರ ಬೆಲ್ಲದ, ಹಣಕಾಸು ಆಯೋಗದ ಸದಸ್ಯರು, ಇತರರು ಉಪಸ್ಥಿತರಿದ್ದರು.ವ್ಯಕ್ತಿ ಕಾಣೆ

ಹಾವೇರಿ: ನಗರದ ಪುರದ ಓಣಿ ನಿವಾಸಿ ಗುರುರಾಜ ಚಂದ್ರಶೇಖರ ಹುಲಕೋಟಿ(33) ಮೇ 17ರಂದು ಮನೆಯಿಂದ ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವುದಾಗಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕಾಣೆಯಾದ ವ್ಯಕ್ತಿ 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಗೋದಿಗೆಂಪು ಮೈಬಣ್ಣ, ನೀಟಾದ ಮೂಗು ಹೊಂದಿದ್ದು, ಬಿಳಿ ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಹಾವೇರಿ ಶಹರ ಠಾಣೆ ದೂ. 08375-232333, ಮೊ. 9480804545, ಹಾವೇರಿ ಕಂಟ್ರೋಲ್ ರೂಂ 08375- 237368 ಹಾಗೂ ಪೊಲೀಸ್ ಅಧೀಕ್ಷಕರ ಕಚೇರಿ ದೂ. 08375- 232800 ಸಂಪರ್ಕಿಸಬೇಕೆಂದು ಹಾವೇರಿ ಶಹರ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.